Monday, May 20, 2024

ಪ್ರಾಯೋಗಿಕ ಆವೃತ್ತಿ

ಕುಂಭಮೇಳದಲ್ಲಿ 6 ಲಕ್ಷ ಜನ ಭಾಗವಹಿಸುವ ನಿರೀಕ್ಷೆ: ಸಚಿವ ನಾರಾಯಣಗೌಡ

ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳದಲ್ಲಿ 6 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಲ್ಲಿ ಗುರುವಾರ 3 ಜ್ಯೋತಿ ರಥಯಾತ್ರೆಗಳಿಗೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಆಗಮಿಸಬೇಕಾಗಿ ಕೋರಿದರು.

ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇವಸ್ಥಾನದ ಉದ್ಘಾಟನೆ ನಡೆಯಲಿದೆ. ಅ.14 ರಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು, ಅ.16 ರಂದು ಕರ್ನಾಟಕದ ಮುಖ್ಯಮಂತ್ರಿಗಳು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 35 ರಿಂದ 40 ಸಮುದಾಯದ ವಿವಿಧ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದರು

ಜ್ಯೋತಿ ಯಾತ್ರೆಯು ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಮೂರು ಜಿಲ್ಲೆಯಲ್ಲಿ ನಡೆಯಲಿದೆ. ಭಗವಂತನ ಯಾತ್ರೆಯನ್ನು ಜನರಿಗೆ ಶಾಂತಿ, ಸುಖ, ಆರೋಗ್ಯ ನೀಡಲಿ ಎಂದು ನಡೆಸಲಾಗುತ್ತಿದೆ ಎಂದರು.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಮಾತನಾಡಿ, ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16ರವರಿಗೆ ಮಹಾ ಕುಂಭಮೇಳ ಕಾರ್ಯಕ್ರಮವು ಶ್ರೀ ಡಾ.ನಿರ್ಮಲಾನಂದ ಮಹಾಸ್ವಾಮಿ, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.

ಮಹಾ ಕುಂಭಮೇಳ ಕಾರ್ಯಕ್ರಮದಲ್ಲಿ ಸಾಧುಸಂತರು, ಸ್ವಾಮೀಜಿಗಳು ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ಬರುವಂತಹ ಭಕ್ತಾಧಿಗಳಿಗೆ ಊಟೋಪಚಾರದ ವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು.

ಮೈಸೂರು,ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಸಂಚರಿಸುವ ಮೂರು ಜ್ಯೋತಿ ರಥಗಳಿಗೆ ಇಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ಚಾಲನೆಯನ್ನು ನೀಡಲಾಗಿದೆ. ಜ್ಯೋತಿರಥಗಳು ಮೂರು ಜಿಲ್ಲೆಗಳಲ್ಲಿ ಸಂಚರಿಸಿ ಗ್ರಾಮದ ದೇವಸ್ಥಾನ, ಮಠ ಹಾಗೂ ಜನ ಸಾಮಾನ್ಯರಿಗೆ ಕುಂಭಮೇಳ ಕಾರ್ಯಕ್ರಮದ ಬಗ್ಗೆ ತಿಳಿಸುವಂತಹ ಕೆಲಸವನ್ನು ಮಾಡುತ್ತದೆ. ಈ ಕಾರ್ಯಕ್ರಮಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಸಾಲೂರುಮಠದ ಶ್ರೀಗಳಾದ ಶಾಂತಾ ಮಲ್ಲಿಕಾರ್ಜುನ ಸ್ವಾಮೀಜಿ, ಹನೂರು ವಿಧಾನಸಭಾ ಶಾಸಕ ಆರ್.ನರೇಂದ್ರ, ಕಾಡಾ ಅಧ್ಯಕ್ಷ ಜಿ.ನಿಜಗುಣ ರಾಜು, ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಜಿ.ಪಂ. ಸಿಇಒ ಶಾಂತಾ ಎಲ್.ಹುಲ್ಮನಿ, ಉಪವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ರೂಪ, ಸಣ್ಣಸ್ವಾಮಿ ಗೌಡ, ರಂಗನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!