ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೊ, ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಬಂಧಿಖಾನೆ ಇಲಾಖೆ ಎಚ್ಚೆತ್ತುಕೊಂಡಿದೆ.
ದರ್ಶನ್ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ್ ಸ್ಥಳಾಂತರವಾಗಲಿದ್ದಾರೆ ಎನ್ನಲಾಗುತ್ತಿದೆ.
ಶತಮಾನಗಳ ಇತಿಹಾಸ ಇರುವ ಹಿಂಡಲಗಾ ಜೈಲಿನಲ್ಲಿ 15 ಕತ್ತಲು ಕೋಣೆಗಳು(ಅಂಧೇರಿ ಸೆಲ್ಗಳು) ಇವೆ. ಯಾವುದೇ ಕ್ಷಣದಲ್ಲಾದರೂ ಬಂಧಿಖಾನೆ ಮೇಲಧಿಕಾರಿಗಳಿಂದ ಕೋಣೆಗಳ ಮಾಹಿತಿ ಕೇಳುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕಾರಿಗಳೂ ಮಾಹಿತಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ.
ನಟ ದರ್ಶನ್ ಬೆಳಗಾವಿ ಜೈಲಿಗೋ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುವ ಬಗ್ಗೆ ಇಂದು (ಸೋಮವಾರ) ಸಂಜೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಅಧಿಕಾರಿಗಳು ಅಮಾನತು
ಕೊಲೆ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ವಿಐಪಿ ಸೌಲಭ್ಯ ನಡೆಸುತ್ತಿರುವ ಫೋಟೋ ವಿಡಿಯೋಗಳು ವೈರಲ್ ಆದ ನಂತರ ಏಳು ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರು, ಘಟನೆ ಹೇಗೆ ನಡೆಯಿತು ಎಂದು ವರದಿ ಕೇಳಿದ್ದೇನೆ. ಇದರಲ್ಲಿ ಏಳು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ.
ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ. ಜೈಲು ಸೂಪರಿಂಟೆಂಡೆಂಟ್ ಅವರನ್ನು ವರ್ಗಾವಣೆ ಮಾಡುತ್ತೇವೆ. ಈ ರೀತಿಯ ಘಟನೆ ನಡೆಯಬಾರದು. ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.