ಪ್ರಸ್ತುತ ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಎಲ್ಲಾ ಬಗೆಯ ದೌರ್ಜನ್ಯಗಳನ್ನು ತಪ್ಪಿಸಲು, ಮುಖ್ಯವಾಗಿ ಮಕ್ಕಳ ಜೀವ ಹಾಗೂ ಜೀವನದ ರಕ್ಷಣೆಗಾಗಿ ಕಾರ್ಯ ನಿರ್ವಹಿಸುವುದಾಗಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ನೂತನ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
ರಾಜ್ಯ ಸರ್ಕಾರದಿಂದ ಆಯೋಗದ ಅಧ್ಯಕ್ಷರಾಗಿ ನೇಮಕಕೊಂಡ ನಂತರ ಮಂಡ್ಯದಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವಿದೆ, ಈ ಹಿಂದೆ ಬಾಲ ಕಾರ್ಮಿಕರ ರಕ್ಷಣೆಗಾಗಿ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆ ತರುವುದಕ್ಕಾಗಿ ಕೆಲಸ ಮಾಡಿದ ಅನುಭವಿದೆ, ಅದರ ಆಧಾರದ ಮೇಲೆ ಮಕ್ಕಳ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಮನೆಯಿಂದ ಮಠದವರೆಗೆ ಮಕ್ಕಳನ್ನು ರಕ್ಷಣೆ ಮಾಡಬೇಕಾದ ಅವಶ್ಯಕತೆ ಇದೆ, ಇತ್ತಿಚೇಗೆ ಮಳವಳ್ಳಿಯಲ್ಲಿ ನಡೆದ 10 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಆಗಲೇಬೇಕು. ಸದ್ಯದಲ್ಲೇ ಆ ಸಂತ್ರಸ್ಥ ಬಾಲಕಿಯ ಮನೆಗೆ ತೆರಳಿ ಕುಟುಂಬರವರಿಗೆ ಸಾಂತ್ವನ ಹೇಳಿ, ನೈತಿಕ ಬೆಂಬಲ ನೀಡಲಾಗುವುದು ಎಂದರು.