ನ.11 ರಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 2 ರಥಗಳ ಮೂಲಕ ಪವಿತ್ರ ಮಣ್ಣನ್ನು ಸಂಗ್ರಹಿಸುವ ಕಾರ್ಯಕ್ಕೆ ಅ.29 ರಂದು ಮಂಡ್ಯ ನಗರದ ಕಾಳಿಕಾಂಭ ದೇವಸ್ಥಾನದಲ್ಲಿ ರಥಯಾತ್ರೆಗೆ ಚಾಲನೆ ನೀಡಲಾಗುವುದೆಂದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಳಕ್ಕೆ ಹಾಕುವ ಪವಿತ್ರ ಮಣ್ಣು ಸಂಗ್ರಹಿಸಲು ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನ.11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಇದಕ್ಕೆ ಪವಿತ್ರ ಮಣ್ಣು ಸಂಗ್ರಹಿಸಲು ಏಳು ತಾಲ್ಲೂಕುಗಳ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಕೆಂಪೇಗೌಡ ರಥಯಾತ್ರೆ ಸಾಗಲಿದ್ದು, ಜನತೆ ಪವಿತ್ರ ಮಣ್ಣನ್ನು ಸಂಗ್ರಹಿಸುವ ಕಾರ್ಯಕ್ಕೆ ಸಂಪೂರ್ಣವಾಗಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಜಿ.ಪಂ.ಸಿಇಓ ಶಾಂತಾ ಹುಲ್ಮನಿ ಮಾತನಾಡಿ, ಮದ್ದೂರು ತಾಲೂಕು ಗಡಿಭಾಗವಾದ ನಿಡಘಟ್ಟದಲ್ಲಿ 108 ಪೂರ್ಣ ಕುಂಭಗಳೊಂದಿಗೆ ರಥಗಳನ್ನು ಬರಮಾಡಿಕೊಳ್ಳಲಾಗುವುದು. ಜಿಲ್ಲೆಯ ಏಳು ತಾಲೂಕುಗಳಲ್ಲೂ ಸೇರಿ 233 ಗ್ರಾಮ ಪಂಚಾಯಿತಿಗಳಿದ್ದು, ಎರಡು ರಥಗಳ ಮೂಲಕ ಪ್ರತಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಪವಿತ್ರ ಮಣ್ಣು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ. ಗ್ರಾಮ ಪಂಚಾಯಿತಿ ಪಿಡಿಒಇ, ಆರ್ಐ, ಉಪ ತಹಶೀಲ್ದಾರ್ ಅವರಿಗೆ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಿಸುವ ಜವಾಬ್ದಾರಿ ವಹಿಸಲಾಗಿದೆ ಎಂದರು.
ಶಾಸಕ ಸಿ.ಎಸ್.ಪುಟ್ಟರಾಜು ನಮ್ಮ ಪಾಂಡವಪುರದಲ್ಲೂ ರಥಕ್ಕೆ ಪೂಜೆ ಸಲ್ಲಿಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಹಿನ್ನೆಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹಿಸುತ್ತಿರುವ ಕಾರ್ಯದಲ್ಲಿ ಕೈಜೋಡಿಸಲಾಗುವುದು ಎಂದರು.
ಜಿಲ್ಲೆಯಾದ್ಯಂತ ರಥಗಳು ಸಂಗ್ರಹಿಸುವ ಪವಿತ್ರ ಮಣ್ಣನ್ನು ನ.8ರಂದು ಮದ್ದೂರಿನ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಬಳಿ ಪವಿತ್ರ ಮಣ್ಣಿಗೆ ಪೂಜೆ ಮಾಡಿ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಹೇಳಿದರು.
ಸಭೆಯಲ್ಲಿ ರೇಷ್ಮೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ,ಎಸ್. ಪಿ.ಯತೀಶ್, ಉಪವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿ, ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.