ಮಳವಳ್ಳಿ ತಾಲ್ಲೂಕಿನ ಅಗಸನಪುರ ಗ್ರಾಮ ಪಂಚಾಯತಿ ಪಿಡಿಓ ಹರಿಶಂಕರ್ ನರೇಗಾ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಅಗಸನಪುರ ಪಿಡಿಒ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ ಮಾತನಾಡಿ, ನರೇಗಾ ಕಾಮಗಾರಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.
ಕೂಲಿ ಕಾರ್ಮಿಕರಿಗ ಸಮರ್ಪಕವಾಗಿ ಕೆಲಸ ನೀಡುವಲ್ಲಿ ವಿಫಲವಾಗಿದ್ದಾರೆ ಎಂದರು.
ಇತ್ತೀಚಿಗೆ ಮುಖ್ಯಮಂತ್ರಿಯವರೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ನರೇಗಾ ಯೋಜನೆಯಡಿ ಸಮರ್ಪಕವಾಗಿ ಕೆಲಸ ನೀಡುವಂತೆ ಸೂಚನೆ ನೀಡಿದ್ದರೂ ತಾಲ್ಲೂಕಿನ ಅಗಸನಪುರ ಹಾಗೂ ನೆಲಮಾಕನಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನೀಡಿಲ್ಲ.ಜಿಲ್ಲಾ ಪಂಚಾಯಿತಿ ಸಿಇಒ ಅವರ ಸ್ಪಷ್ಟ ಆದೇಶವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಮುಖಂಡರು ಪ್ರಶ್ನೆ ಮಾಡಿದರೆ ಅಸಡ್ಡೆಯ ಉತ್ತರ ನೀಡುತ್ತಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಹಾಗೂ ಸಮರ್ಪಕ ಕೂಲಿ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ ಭೇಟಿ ನೀಡಿ ತಕ್ಷಣವೇ ಅಗಸನಪುರ ಹಾಗೂ ನೆಲಮಾಕನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನೀಡುವಂತೆ ಪಿಡಿಒಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದೇವಿ, ಮುಖಂಡರಾದ ಟಿ.ಎಚ್.ಆನಂದ್, ಸುಶೀಲಾ, ಸುನೀತಾ, ಮಂಜುಳಾ, ರಾಮಣ್ಣ, ನಾಗರತ್ನ, ಪಾಪಣ್ಣ ಇದ್ದರು