ಮಂಡ್ಯ ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲ ಕೃಷ್ಣ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕಾರ್ಯಪಡೆ ನಿಗಧಿತವಾಗಿ ದಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು ಎಂದರು
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ.100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ.50 ರಷ್ಟನ್ನು ಈ ತಿಂಗಳ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.
ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿ.15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸಿ ಸಂಸ್ಕರಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿ.ಪಂ.ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ಪಾರ್ವತಿ ದೇವಿ, ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.