ಶಾಲೆಗಳಲ್ಲಿ ಬಿಸಿಯೂಟ ಅಡುಗೆ ತಯಾರಿಸುವವರು ಮತ್ತು ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ ಅಡಿ ವೇತನ ನಿಗದಿ ಮಾಡಲು ರಾಜ್ಯ ಸರ್ಕಾರ ಆದೇಶ ನೀಡುವಂತೆ ಸಾಮಾಜಿಕ ಕಾರ್ಯಕರ್ತರಾದ ನೌಹೇರಾ ಶೇಖ್ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯದ ಹೈ ಕೋರ್ಟ್ ನಿರಾಕರಿಸಿ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಕರ್ನಾಟಕ ಕನಿಷ್ಠ ವೇತನ ನಿಯಮಗಳ ಅಡಿ ನಿಗದಿಪಡಿಸಿರುವಂತೆ ಕನಿಷ್ಠ ವೇತನ ಕೇಳುವಂತಿದ್ದರೆ, ಕೆಲಸದ ಅವಧಿ 9 ಗಂಟೆಗಳು ಇರಬೇಕು. ಇಲ್ಲದಿದ್ದಲ್ಲಿ ಕನಿಷ್ಠ ವೇತನ ನಿಯಮಗಳ ಅನುಸಾರ ವೇತನ ಕೇಳಲು ಸಾಧ್ಯವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಕನಿಷ್ಠ ವೇತನ ಕಾಯ್ದೆಯ ನಿಯಮಗಳ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಅನ್ವಯಿಸುತ್ತವೆ. ಕರ್ನಾಟಕ ಕನಿಷ್ಠ ವೇತನ ನಿಯಮಗಳು-1958ರ ಪ್ರಕಾರ ಕೆಲಸದ ಅವಧಿ 9 ಗಂಟೆ ಇರಬೇಕು. ಈ ಮಾನದಂಡ ಅಡುಗೆ ತಯಾಕರು ಮತ್ತು ಸಹಾಯಕರ ಕೆಲಸದಲ್ಲಿ ಪಾಲನೆಯಾಗಿಲ್ಲ ಎಂದಿದೆ.
ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆಯವರು ಮತ್ತು ಸಹಾಯಕರು ಗುತ್ತಿಗೆ ಆಧಾರದಲ್ಲಿ ದಿನಕ್ಕೆ ನಾಲ್ಕು ಗಂಟೆಯಂತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಕಾಯ್ದೆ ಅಡಿ ವೇತನ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.
ಹಿನ್ನೆಲೆ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಮಕ್ಕಳಿಗೆ ರಾಜ್ಯ ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಅದಕ್ಕಾಗಿ ಬಿಸಿಯೂಟ ಯೋಜನೆ ಅಡಿ ಗುತ್ತಿಗೆ ಆಧಾರದಲ್ಲಿ ಅಡುಗೆ ತಯಾರಕರು ಹಾಗೂ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಬಿಸಿಯೂಟ ತಯಾರಕರು ತಮಗೆ ನೀಡುತ್ತಿರುವ ವೇತನ ಹಾಗೂ ಸವಲತ್ತುಗಳು ಸೂಕ್ತವಾಗಿಲ್ಲ ಎಂದು ಆರೋಪಿಸಿ 2018ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಸರ್ಕಾರ ಈ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಅಡುಗೆ ತಯಾರಕರ ಪರವಾಗಿ ಅರ್ಜಿದಾರರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.