ರೈತರು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ನಿಗಧಿಪಡಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಆರೋಪಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾರ್ಖಾನೆಯನ್ನು ಪ್ರಾರಂಭಿಸುವ ಮುನ್ನ ರೈತರಸಭೆ ಕರೆದು ಕಬ್ಬಿಗೆ ಬೆಲೆ ನಿಗದಿ ಮಾಡುವ ಪರಿಪಾಠವಿತ್ತು. ಆದರೆ ರಾಜ್ಯ ಸರ್ಕಾರದ ಬದಲು ಕೇಂದ್ರ ಸರ್ಕಾರ ಕಬ್ಬಿನ ದರ ನಿಗಧಿ ಮಾಡುವ ಪರಿಪಾಠ ಬಂದ ನಂತರ, ರೈತರನ್ನು ನಿಷ್ಕೃಷ್ಟವಾಗಿ ನಡೆಸಿಕೊಳ್ಳಲಾಗುತ್ತಿದೆ, ಪ್ರಸ್ತುತ ಕಬ್ಬಿಗೆ 2,800 ರೂ. ದರ ನಿಗದಿ ಮಾಡಿದ್ದು, ಇದರಿಂದ ರೈತರಿಗೆ ಯಾವುದೇ ಲಾಭಾಂಶ ದೊರೆಯುವುದಿಲ್ಲ ಎಂದರು.
ಇಬ್ಬರು ಸಚಿವರು ವಿಫಲ
ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ರೇಷ್ಮೆ ಸಚಿವ ನಾರಾಯಣಗೌಡ ಅವರು ರೈತರ ಸಮಸ್ಯೆ ಬಗೆಹಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ 6 ದಿನಗಳಿಂದ ಮಂಡ್ಯದಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಬಗ್ಗೆ ಸಚಿವರಿಗೆ ಗಮನವಿಲ್ಲವೇ ? ಕೂಡಲೇ ಸಚಿವರು ರೈತರೊಂದಿಗೆ ಮಾತುಕತೆ ನಡೆಸಿ, ಕಬ್ಬಿಗೆ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.
ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ
ಡಿಸೆಂಬರ್ ತಿಂಗಳಿನಿಂದ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಲಿದ್ದು, ಕೂಡಲೇ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸಿದ ಅವರು, ಸರ್ಕಾರ ಕ್ವಿಂಟಾಲ್ ಭತ್ತಕ್ಕೆ 2,200 ರೂ. ದರ ನಿಗದಿ ಮಾಡಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿ ಮಧ್ಯವರ್ತಿಗಳು ಕೇವಲ 1,800 ರೂ.ಭತ್ತ ಖರೀದಿ ಮಾಡಿ ರೈತರನ್ನು ವಂಚಿಸುತ್ತಿದ್ಧಾರೆ. ಆದ್ದರಿಂದ ಕೂಡಲೇ ಖರೀದಿ ಕೇಂದ್ರಗಳನ್ನ ತೆರೆಯಬೇಕೆಂದರು.
ಗೋಷ್ಠಿಯಲ್ಲಿ ಶಾಸಕರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಎಂ.ಎಸ್.ಆತ್ಮಾನಂದ, ರಮೇಶ್ ಬಂಡೀಸಿದ್ದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಮುಖಂಡರಾದ ರುದ್ರಪ್ಪ, ವಿಜಯಕುಮಾರ್, ಹಾಲಹಳ್ಳಿ ಅಶೋಕ್ ಉಪಸ್ಥಿತರಿದ್ದರು.