ರಾಜ್ಯದದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ಮಿತಿ ಮೀರಿದೆ, ಇಡೀ ಮಂಡ್ಯ ಜಿಲ್ಲೆ ಲಂಚಮಯವಾಗಿದೆ. ಅದರಲ್ಲೂ ವಿಶೇಷವಾಗಿ ತಾಲ್ಲೂಕು ಅಫೀಸ್ ಹಾಗೂ ಕಂದಾಯ ಇಲಾಖೆಯ ಕಚೇರಿ ಪ್ರವೇಶಿಲು ಎಂಟ್ರೆನ್ಸ್ ಫೀ ನಂತೆ ಲಂಚ ಕೊಟ್ಟು ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಾಗ್ತಿಲ್ಲ, ಅಧಿಕಾರಿಗಳ, ಬಿಜೆಪಿ ಜನಪ್ರತಿನಿಧಿಗಳ ಭ್ರಷ್ಟಾಚಾರ ಕಡಿಮೆ ಆಗಿಲ್ಲ, ಕಲೆಕ್ಷನ್ ನಿಂತಿಲ್ಲ. ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳು ಏನ್ ಮಾಡ್ತೀದ್ದರೋ ಗೊತ್ತಿಲ್ಲ, ಒಟ್ಟಿನಲ್ಲಿ ಜನಸಾಮಾನ್ಯರನ್ನು ಎಲ್ಲರೂ ಸುಲಿಗೆ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಕಂದಾಯ ಇಲಾಖೆಯಲ್ಲಿ ದೊಡ್ಡ ಮಾಫಿಯಾವೇ ನಡೆಯುತ್ತಿದೆ, ಬಿಜೆಪಿಯ ನಾಯಕರು ಚುನಾವಣೆಯ ವೆಚ್ಚಕ್ಕಾಗಿ ಹಣ ಮಾಡುವ ದಂಧೆಯಲ್ಲಿ ನಿರತರಾಗಿದ್ದಾರೆ. ಯಾರು ಹೇಳುವವರು ಇಲ್ಲ, ಕೇಳುವವರೂ ಇಲ್ಲದಂತಾಗಿದೆ. ಇಂತಹ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸಬೇಕಾಗಿದೆ ಎಂದರು.
ಗುತ್ತಿಗೆದಾರರಿಗೆ 250 ಕೋಟಿ ರೂ. ಬಾಕಿ
ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಿದ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆಯು ಸುಮಾರು 250-300 ಕೋಟಿ ರೂ. ಬಾಕಿ ಪಾವತಿಸಬೇಕಾಗಿದೆ. ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ, ಎಲ್ಲಾ ಕಡೆ ಕಮಿಷನ್ ರಾಜಕಾರಣ ನಡೆಯುತ್ತಿದೆ, ರಾಜ್ಯದಾದ್ಯಂತ ಇದೇ ಪರಿಸ್ಥಿತಿ ಇದೆ ಎಂದು ದೂರಿದರು.
ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಯಾರದೋ ಜಮೀನನ್ನು ಮತ್ಯಾರಿಗೂ ಖಾತೆ ಮಾಡಿಕೊಡುವ ಮಾಫಿಯಾಗಳು ಜಿಲ್ಲೆಯಲ್ಲಿ ತಲೆ ಎತ್ತಿವೆ. ಇದಕ್ಕೆ ಸಾಕಷ್ಟು ನಿದರ್ಶನಗಳು ನನ್ನ ಮುಂದಿವೆ. ಒಟ್ಟಿನಲ್ಲಿ ಸರ್ಕಾರಕ್ಕೆ ಈ ಎಲ್ಲಾ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.