ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್. ರವೀಂದ್ರ, ಜಿ.ಪಂ. ಮಾಜಿ ಸದಸ್ಯ ಎಚ್.ತ್ಯಾಗರಾಜ್, ಕಾಂಗ್ರೆಸ್ ಮುಖಂಡ ಆನಂದ್ ಕುಮಾರ್ ಕಾಂಗ್ರೆಸ್ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
ಪಾಂಡುಪುರ ತಾಲೂಕಿನ ಪುರಾಣ ಪ್ರಸಿದ್ಧವಾದ ಶ್ರೀ ಚಲುವನಾರಾಯಣಸ್ವಾಮಿ ಸನ್ನಿಧಿಯಿರುವ ಮೇಲುಕೋಟೆ ಕ್ಷೇತ್ರದಿಂದ ಡಾ. ಎಚ್. ಎನ್. ರವೀಂದ್ರ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ಪ್ರಬಲ ಹೋರಾಟ ರೂಪಿಸಿರುವ ಡಾ.ರವೀಂದ್ರ ಉತ್ತಮ ವಾಗ್ಮಿಯಾಗಿದ್ದು, ಕ್ಷೇತ್ರದಲ್ಲಿ ಜನರ ಸಂಪರ್ಕ ಹೊಂದಿದ್ದಾರೆ.
ಹಾಗೆಯೇ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ,ಉದ್ಯಮಿ ಎಚ್.ತ್ಯಾಗರಾಜು ಮಾಜಿ ಶಾಸಕ ಹಲಗೇಗೌಡರ ಪುತ್ರರಾಗಿದ್ದು, ಕಾಂಗ್ರೆಸ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ ಆನಂದ್ ಕುಮಾರ್ ಕೂಡ ಟಿಕೆಟ್ ಅರ್ಜಿ ಸಲ್ಲಿಸಿದ್ದು, ಮೂವರಲ್ಲಿ ಟಿಕೆಟ್ ಯಾರ ಪಾಲಾಗಲಿದೆ ಎಂಬುದು ಗಮನ ಸೆಳೆದಿದೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದಿನ ಎರಡು ಚುನಾವಣೆಯಲ್ಲಿ ರೈತ ಸಂಘದ ಅಭ್ಯರ್ಥಿಗಳನ್ನು ಬೆಂಬಲಿಸಿತ್ತು. ಈ ಬಾರಿಯೂ ರೈತ ಸಂಘದ ಅಭ್ಯರ್ಥಿಗೆ ಬೆಂಬಲ ನೀಡುವುದೇ ಇಲ್ಲಾ, ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.