ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಕೆಆರ್ಎಸ್ ಬೃಂದಾವನದಲ್ಲಿ ಇತ್ತಿಚೇಗೆ ಚಿರತೆ ಕಾಣಿಸಿಕೊಂಡಿದ್ದರಿಂದ, ಕಾವೇರಿ ನೀರಾವರಿ ನಿಗಮಕ್ಕೆ ಬರೋಬರಿ 50 ಲಕ್ಷ ರೂ.ನಷ್ಟ ಸಂಭವಿಸಿದೆ.
ಚಿರತೆ ಹಾವಳಿ ಹಿನ್ನೆಲೆಯಲ್ಲಿ ಕಳೆದ ನ.6ರಿಂದ ಅಂದರೆ ಸುಮಾರು 15 ದಿನಗಳಿಂದ ಬೃಂದಾವನ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಜೊತೆಗೆ ಅರ್ಧ ತಿಂಗಳು ಕಳೆದರೂ ಚಿರತೆಯನ್ನು ಹಿಡಿದಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಪ್ರವಾಸಿಗರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 21ರಿಂದ ಬೃಂದಾವನ ಗಾರ್ಡನ್ನಲ್ಲಿ ಚಿರತೆ ನಾಲ್ಕು ಬಾರಿ ಕಾಣಿಸಿಕೊಂಡಿದೆ. ಹೀಗಾಗಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ನ.6ರಿಂದ ಚಿರತೆ ಸೆರೆ ಹಿಡಿಯುವವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಬೃಂದಾವನಕ್ಕೆ ವಾರದ ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡುತ್ತಾರೆ. ಇನ್ನು ವಾರಾಂತ್ಯ, ಸರ್ಕಾರಿ ರಜಾ ದಿನಗಳಲ್ಲಿ 5 ಸಾವಿರಕ್ಕೂ ಜನರು ಭೇಟಿ ನೀಡುತ್ತಾರೆ. ಆದ್ರೆ ಬೃಂದಾವನ ಬಂದ್ ಮಾಡಿರುವುದರಿಂದ ಪ್ರವಾಸಿಗರಿಲ್ಲದೆ ಕಾವೇರಿ ನೀರಾವರಿ ನಿಗಮಕ್ಕೆ ಅಪಾರ ನಷ್ಟ ಉಂಟಾಗಿದೆ.
ಬೃಂದಾವನಕ್ಕೆ ಪ್ರವೇಶಕ್ಕೆ ಒಬ್ಬರಿಗೆ 50 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಈಗ ಪ್ರವೇಶ ಬಂದ್ ಆಗಿರುವ ಕಾರಣ ನಿಗಮಕ್ಕೆ ಆದಾಯ ಬರುತ್ತಿಲ್ಲ. ಮತ್ತೊಂದೆಡೆ ಇಷ್ಟು ದಿನ ಕಳೆದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ನಿಗಮದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇನ್ನು ಕೆಆರ್ಎಸ್ನ ಬೃಂದಾವನದ ಪ್ರವಾಸಿಗರನ್ನೇ ನೆಚ್ಚಿಕೊಂಡಿದ್ದ ನೂರಾರು ವ್ಯಾಪಾರಿಗಳಿಗೆ ಈಗ ವ್ಯಾಪಾರವಿಲ್ಲದಂತಾಗಿದೆ. ಬೃಂದಾವನದಲ್ಲಿದ್ದ ಹಣ್ಣಿನ ಅಂಗಡಿ, ತಂಪು ಪಾನೀಯ, ಕರಕುಶಲ ವಸ್ತು ಮಾರಾಟ ಸೇರಿದಂತೆ ನೂರಾರು ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಬೃಂದಾವನದ ಒಳಗಿರುವ ರಾಯಲ್ ಆರ್ಕಿಡ್, ಮಯೂರ ಹೋಟೆಲ್ಗಳು ಕೂಡ ಪ್ರವಾಸಿಗರಿಲ್ಲದೇ ನಷ್ಟ ಅನುಭವಿಸುವಂತಾಗಿದೆ.