ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಮಡಿವಾಳ ಮಾಚಿದೇವರ ಸಂಘ, ಜಿಲ್ಲಾ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಮಡಿವಾಳರ ಸಂಘದ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಕತ್ತೆಗಳೊಂದಿಗೆ ವಿನೂತನ ಪ್ರತಿಭಟನೆ ನಡೆಯಿತು.
ಮಂಡ್ಯನಗರದ ಸರ್ಎಂವಿ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾ ಕಾರರು, ಮಡಿವಾಳ ಸಮಾಜ ಸಾಮಾಜಿಕವಾಗಿ ಅವಮಾನ ಎದುರಿಸುತ್ತಿದೆ. ಅಲ್ಲದೆ ಆರ್ಥಿಕವಾಗಿ ಹಿನ್ನಡೆ ಅನುಭವಿಸುತ್ತಿದೆ. ಶೈಕ್ಷಣಿಕವಾಗಿಯೂ ನಿರೀಕ್ಷಿತ ಯಶಸ್ಸು ಕಂಡಿಲ್ಲ. ರಾಜಕೀಯವಾಗಿಯೂ ಸೂಕ್ತ ಮಾನ್ಯತೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಆಗ್ರಹಿಸಿದರು.
ಕಳೆದ ನಾಲ್ಕು ದಶಕದಿಂದ ಹೋರಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಿಲ್ಲ, ಡಾ.ಅನ್ನಪೂರ್ಣದೇವಿ ವರದಿಯನ್ನು ಜಾರಿಗೆ ತಂದಿಲ್ಲ ಎಂದು ದೂರಿದರು. ಮಡಿವಾಳರ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ಸರ್ಕಾರ ಘೋಷಣೆ ಮಾಡಬೇಕು, ಅಲ್ಲದೇ ರಾಜಕೀಯವಾಗಿ ಉನ್ನತ ಅವಕಾಶಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎಲ್.ಸಂದೇಶ್, ಡಿ.ರಮೇಶ, ಬಿ.ಟಿ.ಗುರುರಾಜ್, ಎಂ.ಎನ್.ರವಿ ಮತ್ತಿತರರಿದ್ದರು.