-
ದುದ್ದ ಗ್ರಾಮದಲ್ಲಿ ಡಿ.7ರಂದು 17ನೇ ಮಂಡ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
- ಸಮ್ಮೇಳನಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕಿ, ಸಾಹಿತಿ ಡಾ.ಲೀಲಾ ಅಪ್ಪಾಜಿ ಆಯ್ಕೆ
ಮಂಡ್ಯ ತಾಲೂಕಿನ ದುದ್ದ ಗ್ರಾಮದಲ್ಲಿ ಡಿಸೆಂಬರ್ 7ರಂದು 17ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷರಾದ ಮನ್ ಮುಲ್ ಅಧ್ಯಕ್ಷ ಬಿ. ಆರ್. ರಾಮಚಂದ್ರು ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಸೆಂಬರ್ 7ರಂದು ದುದ್ದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕಿ, ಸಾಹಿತಿ ಡಾ. ಲೀಲಾ ಅಪ್ಪಾಜಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇಲುಕೋಟೆ ಕ್ಷೇತ್ರದ ಶಾಸಕರಾದ ಸಿ.ಎಸ್. ಪುಟ್ಟ ರಾಜು ಅವರು ಗೌರವ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಂದು ಬೆಳಿಗ್ಗೆ 8.30 ಕ್ಕೆ ಸಮ್ಮೇಳನದ ಧ್ವಜಾರೋಹಣ ನಡೆಯಲಿದೆ ಎಂದು ತಿಳಿಸಿದರು.
9:30 ಕ್ಕೆ ಸಮ್ಮೇಳನದ ಅಧ್ಯಕ್ಷರಾದ ಡಾ.ಲೀಲಾ ಅಪ್ಪಾಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ಸಮ್ಮೇಳನದ ವೇದಿಕೆಗೆ ಕರೆತರಲಾಗುವುದು. 11 ಗಂಟೆಗೆ ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಶಿ ಸಮ್ಮೇಳನ ಉದ್ಘಾಟಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ವಿಚಾರಗೋಷ್ಠಿ, 2.30 ಕ್ಕೆ ಕವಿಗೋಷ್ಠಿ,3 ಗಂಟೆಗೆ ಸಂವಾದ, 4ಕ್ಕೆ ಸನ್ಮಾನ ಸಮಾರಂಭ ಹಾಗೂ 5 ಗಂಟೆಗೆ ಸಮಾರೋಪ ಸಮಾರಂಭ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಸಂಜೆ 6.30 ಕ್ಕೆ ಖ್ಯಾತ ನಟ ಮಂಡ್ಯ ರಮೇಶ್ ಅವರ ನಟನಾ ತಂಡ ‘ಚೋರ ಚರಣದಾಸ’ ನಾಟಕ ಪ್ರದರ್ಶಿಸಲಿದೆ. ಈ ಸಾಹಿತ್ಯ ಸಮ್ಮೇಳನಕ್ಕೆ ದುದ್ದ ಹೋಬಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು, ಸಾಹಿತಿಗಳು, ಶಾಲಾ ಮಕ್ಕಳು, ರೈತರು, ಕನ್ನಡ ಅಭಿಮಾನಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಮ್ಮೇಳನದಲ್ಲಿ ಸುಮಾರು 2500ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8.30 ರಿಂದ ರಾತ್ರಿ 11 ಗಂಟೆಯವರೆಗೂ ವಿವಿಧ ಗೋಷ್ಠಿಗಳು ನಡೆಯಲಿದೆ ಎಂದು ತಿಳಿಸಿದರು.
ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಮಾತನಾಡಿ, ಶಾಸಕರಾದ ಸಿ.ಎಸ್. ಪುಟ್ಟರಾಜು,ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಪ್ರಥಮ ದರ್ಜೆ ಗುತ್ತಿಗೆದಾರ ಹೊಸಹಳ್ಳಿ ಬಾಲರಾಜ್ ಅವರ ಸಹಕಾರದೊಂದಿಗೆ ಈ ಸಮ್ಮೇಳನ ಆಯೋಜಿಸಲಾಗಿದ್ದು, ಖ್ಯಾತ ಸಾಹಿತಿ ಹಿ.ಶಿ.ರಾಮಚಂದ್ರಗೌಡ ಸೇರಿದಂತೆ ಹಲವು ಸಾಹಿತಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಕಸಾಪ ಕೋಶಾಧ್ಯಕ್ಷ ಬಿ.ಎಂ. ಅಪ್ಪಾಜಪ್ಪ, ಶಿವಲಿಂಗೇಗೌಡ,ನಗರ ಘಟಕದ ಅಧ್ಯಕ್ಷೆಸುಜಾತ ಕೃಷ್ಣ, ಎಂ.ಆರ್.ಮಂಜು ಉಪಸ್ಥಿತರಿದ್ದರು.