ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಕಡೆಗಣಿಸಿಲ್ಲ. ಕೋವಿಡ್ ಹಾಗೂ ಸತತ ಮಳೆ ಯಿಂದಾಗಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈಗ ನಗರೋತ್ಥಾನ ಯೋಜನೆಯಡಿ 40 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿದೆ ಎಂದು ಬಿಜೆಪಿ ನಾಯಕ ಅಶೋಕ್ ಜಯರಾಮ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ವರ್ಷ ಕೋವಿಡ್ ಕಾಡಿದ ಹಿನ್ನೆಲೆಯಲ್ಲಿ ಎಲ್ಲಾ ಅನುದಾನವನ್ನು ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲಾಯಿತು. ನಂತರ ಸತತವಾಗಿ ಸುರಿದ ಮಳೆ ಯಿಂದ ಯಾವುದೇ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯಲಿಲ್ಲ. ಈಗ ಮಳೆ ನಿಂತಿದ್ದು ನಗರೋತ್ಥಾನ ಯೋಜನೆಯಡಿ 40 ಕೋಟಿ ಹಣವನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದು, ಈಗಾಗಲೇ ಕಾಮಗಾರಿಗಳ ಟೆಂಡರ್ ನಡೆದಿದ್ದು, ಕೆಲವೇ ದಿನಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಲಿವೆ ಎಂದರು.
ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಅವರು ನಗರದ ರಸ್ತೆ ಕಾಮಗಾರಿಯನ್ನು 28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದೆಂದು ತಿಳಿಸಿದ ಹಿನ್ನೆಲೆಯಲ್ಲಿ ಎಸ್.ಡಿ.ಜಯರಾಮ್ ಪ್ರತಿಷ್ಠಾನದಿಂದ ನಾವು ಮಾಡುತ್ತಿದ್ದ ರಸ್ತೆ ಗುಂಡಿ ಮುಚ್ಚುವ ಅಭಿಯಾನವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ ಎಂದರು.
ಹನುಮಮಾಲೆ ಸಂಕೀರ್ತನಾ ಯಾತ್ರೆ
ಡಿಸೆಂಬರ್ 4ರಂದು ಶ್ರೀರಂಗಪಟ್ಟಣದಲ್ಲಿ ಹನುಮಮಾಲೆಯ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಈ ಯಾತ್ರೆಯ ಅಂಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಾದ್ಯಂತ ರಾಮ ಮಂದಿರ ಮತ್ತು ಹನುಮ ಮಂದಿರಗಳಿಗೆ ರಥಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಡಿಸೆಂಬರ್ 4ರಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದಿಂದ ಮೂಡಲ ಬಾಗಿಲು ಆಂಜನೇಯ ದೇವಸ್ಥಾನದವರೆಗೆ ಸಂಕೀರ್ತನ ಯಾತ್ರೆ ನಡೆಯಲಿದ್ದು,ಜಿಲ್ಲೆಯಿಂದ 8-10 ಸಾವಿರ ಹನುಮ ಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ವಿವೇಕ್, ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ ಎಂ.ಬಿ. ರಮೇಶ್, ವೆಂಕಟೇಶ್, ನಿತ್ಯಾನಂದ ಉಪಸ್ಥಿತರಿದ್ದರು.