ಶ್ರೀರಂಗಪಟ್ಟಣದಲ್ಲಿ ಪ್ರಾಯೋಗಿಕವಾಗಿ ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆಗೆ ಮಂಡ್ಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಅನಿಲ್ ಕುಮಾರ್ ಚಾಲನೆ ನೀಡಿದರು.
ರಾಜ್ಯದಲ್ಲಿ ಪ್ರಾಯೋಗಿಕ ಯೋಜನೆಗಾಗಿ ಆಯ್ಕೆಯಾಗಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆ (ಇ- ಸಮೀಕ್ಷೆ )ಗೆ ಶ್ರೀರಂಗಪಟ್ಟಣದ ಗಂಜಾಂನಲ್ಲಿ ಚಾಲನೆ ನೀಡಲಾಯಿತು.
ಮೊಬೈಲ್ ಆಪ್ ಮೂಲಕ ನಡೆಸುವ ಸಮೀಕ್ಷೆಯು ಇಡೀ ರಾಜ್ಯದಲ್ಲಿ ಅನುಷ್ಠಾನಗೊಳ್ಳಲಿದ್ದು, ಈಗ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಸಮೀಕ್ಷೆ ನಡೆಸಲು ರಾಜ್ಯವಲಯದಿಂದ ಆಯ್ಕೆಯಾಗಿರುವುದು ಸಂತೋಷದ ವಿಚಾರ ಎಂದು ಅನಿಲ್ ಕುಮಾರ್ ಹೇಳಿದರು.
ಈ ಸಮೀಕ್ಷೆಯಿಂದ ಆರೋಗ್ಯ ಹಾಗೂ ಪೌಷ್ಟಿಕ ಕ್ಷೇತ್ರದಲ್ಲಿ ಸರ್ಕಾರದ ವತಿಯಿಂದ ರೂಪಿಸುವ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಮನೆ ಮನೆ ಭೇಟಿಯ ಮೂಲಕ ನಡೆಸುವ ಈ ಸಮೀಕ್ಷೆಯ ಸಂದರ್ಭದಲ್ಲಿ ಸಾರ್ವಜನಿಕರು ಬಿಪಿಎಲ್ ಕಾರ್ಡ್ ಅನ್ನು ಹಾಜರುಪಡಿಸಿ, ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ಎನ್ ಕೆ ವೆಂಕಟೇಶ್ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ, ನಗರ ದತ್ತಾಂಶ ವ್ಯವಸ್ಥಾಪಕ ಮನು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂ ಮಹದೇವಮ್ಮ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ಆಶಾ ಕಾರ್ಯಕರ್ತೆ ಹೇಮಾವತಿ ಪಾಲ್ಗೊಂಡಿದ್ದರು.