ಸಕಾಲಕ್ಕೆ ಬಸ್ ಗಳು ಬಾರದ ಕಾರಣ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬುಧವಾರ ದಿಢೀರನೆ ಮಂಡ್ಯ-ಪಾಂಡವಪುರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ದೊಡ್ಡಬ್ಯಾಡರಹಳ್ಳಿಯಿಂದ ನೂರಾರು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಂಡವಪುರ ಹಾಗೂ ಮಂಡ್ಯಕ್ಕೆ ವಿವಿಧ ಕಾಲೇಜುಗಳಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಬಾರದ ಹಿನ್ನೆಲೆಯಲ್ಲಿ ತೊಂದರೆ ಅನುಭವಿಸಿದರು. ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಕಾರಣ ಸಾರಿಗೆ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಸುಗಮ ಬಸ್ ಸಂಚಾರಕ್ಕೆ ಸೂಕ್ತ ಕ್ರಮವಹಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ಪ್ರತಿಭಟನೆ ನೇತೃತ್ವವನ್ನು ವಿದ್ಯಾರ್ಥಿ ಮುಖಂಡರುಗಳಾದ ಅಭಿಷೇಕ್,ದಯಾನಂದ್ ಸಾಗರ್, ನಿಂಗರಾಜು, ಮನೋಜ್, ಸುಮಂತ್ ಮತ್ತಿತರರು ವಹಿಸಿದ್ದರು.