ರಾಜ್ಯದ ಜನಸಂಖ್ಯೆಯಲ್ಲಿ ಸುಮಾರು ಒಂದು ಕೋಟಿಯಷ್ಟಿರುವ ಒಕ್ಕಲಿಗ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲೇಬೇಕು. ಇಲ್ಲದಿದ್ದರೆ ಚುಂಚಶ್ರೀಗಳ ನೇತೃತ್ವದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ರಾಜ್ಯದ ಜನಸಂಖ್ಯೆಯಲ್ಲಿ ಒಕ್ಕಲಿಗರು
ಶೇ.15 ರಷ್ಟಿದ್ದಾರೆ. ಆದರೆ ಅವರಿಗೆ ಶೇ.4 ರಷ್ಟು ಮೀಸಲಾತ್ರಿ ಮಾತ್ರ ಸಿಗುತ್ತಿದೆ. ಇದನ್ನು ಶೇ.12 ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ನಿರ್ಮಲಾನಂದನಾಥ ಸ್ವಾಮೀಜಿ ಅವರು ರೂಪಿಸುವ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಈಗಾಗಲೇ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಭೆ ನಡೆದು, ನಿವೃತ್ತ ಐಎಫ್ಎಸ್ ಅಧಿಕಾರಿ ಶ್ರೀಕಂಠಯ್ಯ ಅವರ ನೇತೃತ್ವದ ಸಮಿತಿ ರಚಿಸಿದೆ. ಅವರು ಎಷ್ಟು ಮೀಸಲಾತಿ ಪಡೆಯಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂಬ ರೂಪುರೇಷೆ ಸಿದ್ಧ ಮಾಡುತ್ತಾರೆ ಎಂದರು.
ಕುಮಾರಸ್ವಾಮಿ ಗೈರು ಆಶ್ಚರ್ಯ
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಕರೆದಿದ್ದ ಸಭೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಲ್ಲಿರುವ ಒಕ್ಕಲಿಗ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಒಕ್ಕಲಿಗ ಸಮುದಾಯ ಅವರಿಗೆ ಸಾಕಷ್ಟು ಅಧಿಕಾರ ಕೊಟ್ಟಿದೆ. ಅವರು ಮೊದಲ ಸಭೆಗೆ ಬಾರದಿರುವುದು ಆಶ್ಚರ್ಯ ತಂದಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸಭೆ
ಮೀಸಲಾತಿ ಪ್ರಮಾಣವನ್ನು ಶೇ.12ರಿಂದ 15ರವರೆಗೆ ಏರಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಮಾಡಲಾಗಿತ್ತು. ಸಮುದಾಯದ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ಮಾಡಲಾಗಿದೆ. ನಂತರ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಮೀಸಲಾತಿ ಹೆಚ್ಚಳದ ಬಗ್ಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮಾಹಿತಿ ಹೋಗಿದೆ. ಆದ್ದರಿಂದ ಅವರ ನಡೆ ನೋಡಿಕೊಂಡು ಮುಂದಿನ ಹೋರಾಟಕ್ಕೆ ರೂಪಿಸಲಾಗುವುದು. ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮುದಾಯ ಪರವಿದ್ದು, ಸ್ವಾಮೀಜಿಯ ಮಾರ್ಗದರ್ಶನದಲ್ಲಿ ಪ್ರಬಲ ಹೋರಾಟ ರೂಪಿಸಲಿದೆ ಎಂದು ವಿವರ ನೀಡಿದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಮುಖಂಡರಾದ ಗಣಿಗ ರವಿಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ರುದ್ರಪ್ಪ, ವಿಜಯ್ ಕುಮಾರ್ ಉಪಸ್ಥಿತರಿದ್ದರು.