2023ರ ಚುನಾವಣೆಯಲ್ಲಿ ನಾನು ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯಸ್ವಾಮಿ ಸ್ಪಷ್ಟ ಪಡಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬೇರೆ ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನಾಗಮಂಗಲದಲ್ಲಿಯೇ ಸ್ಪರ್ಧಿಸುತ್ತೇನೆ, ಇದು ನೂರಕ್ಕೆ ಇನ್ನೂರಷ್ಟು ಖಚಿತ ಎಂದರು.
ಬದಲಾವಣೆ ಖಚಿತ
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಿಲ್ಲೆಯ ಎಲ್ಲ ಏಳು ತಾಲೂಕುಗಳಲ್ಲಿಯೂ ಗೆದ್ದು, ಐದು ವರ್ಷ ಯಾವ ಅಭಿವೃದ್ಧಿ ಮಾಡಿದ್ದಾರೆ ಎಂಬ ಬಗ್ಗೆ ಜನರಿಗೂ ಗೊತ್ತಿದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷ ಏಳು ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಲಿದೆ ಎಂದರು.
ಆಶ್ರಯ ಮನೆ ಕೊಟ್ಟಿಲ್ಲ
ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯ ಬಡವರಿಗೆ ಒಂದೇ ಒಂದು ಆಶ್ರಯ ಮನೆಯನ್ನು ನೀಡಿಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಪ್ರತಿ ವರ್ಷ ತಾಲೂಕಿಗೆ 2,000 ಆಶ್ರಯ ಮನೆಗಳನ್ನು ನೀಡಿದ್ದರು. ಆದರೆ ಕಳೆದ ಐದು ವರ್ಷಗಳಲ್ಲಿ ಒಂದು ಮನೆಯನ್ನು ಕೊಟ್ಟಿಲ್ಲ. ಮಕ್ಕಳಿಗೆ ಸೈಕಲ್ ಕೊಟ್ಟಿಲ್ಲ ಹಾಲಿಗೆ ಐದು ರೂ. ಬಾಕಿ ಕೊಟ್ಟಿಲ್ಲ. ಪಡಿತರ ಅಕ್ಕಿಯನ್ನು ಕಡಿಮೆ ಮಾಡಿದ್ದಾರೆ. ರಸ್ತೆ ಗುಂಡಿಯನ್ನು ಮುಚ್ಚಿಲ್ಲ ಎಂದು ಬಿಜೆಪಿ ಸರ್ಕಾರ ಹಾಗೂ ಜೆಡಿಎಸ್ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು.
ಜ.15ರೊಳಗೆ ಮೊದಲ ಪಟ್ಟಿ
ಜನವರಿ 15 ರೊಳಗೆ ರಾಜ್ಯದ 100-150 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ವರಿಷ್ಠರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಸಾಕಷ್ಟು ಜನ ಅರ್ಜಿ ಸಲ್ಲಿಸಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜ್ಯ ಸಮಿತಿ ಹಾಗೂ ಹೈಕಮಾಂಡ್ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ತ್ಯಾಗರಾಜು, ಜಿಲ್ಲಾ ಮುಖಂಡರಾದ ರುದ್ರಪ್ಪ ಮತ್ತಿತರರಿದ್ದರು.