ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತಿ ಕ್ರಮ ಕೈಗೊಳ್ಳ ಬೇಕು. ಅಕ್ರಮ ಗಣಿಗಾರಿಕೆ ಕುರಿತು ಸಂಸದರು ಚರ್ಚಿಸಿದಾಗ ಹಿರಿಯ ಭೂ ವಿಜ್ಞಾನಿ ಪದ್ಮಜಾ ಮಾತನಾಡಿ, ಅಕ್ರಮ ಗಣಿಗಾರಿಕೆ ತಡೆಯಲು ಸಿಬ್ಬಂದಿಗಳ ಕೊರತೆ ಇಲ್ಲ, 11 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಮೂರು ಪಾಳಿಯಲ್ಲಿ ಹೋಮ್ ಗಾಡ್೯ ಹಾಗೂ ಭೂ ವಿಜ್ಞಾನಿಗಳನ್ನು ನಿಯೋಜಿಸಲಾಗಿದೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳ ವಿವರವನ್ನು ದಾಖಲಿಸಿಕೊಂಡು ಪರಿಶೀಲಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸೋಲಾರ್ ಪ್ಯಾನಲ್ ಅಳವಡಿಸಿ
ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ಹಾಸ್ಟೆಲ್ ಗಳ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸುವುದರಿಂದ ವಿದ್ಯುತ್ ಸಮಸ್ಯೆ ಪರಿಹಾರವಾಗುತ್ತದೆ. ಇದಕ್ಕೆ ಇಲಾಖೆಗಳ ಸಮನ್ವಯ ಅವಶ್ಯಕತೆ ಇರುತ್ತದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಬಹಳಷ್ಟು ಅವಕಾಶವಿದೆ. ಪ್ರವಾಸೋದ್ಯಮ ಸರ್ಕೂಟ್ ಸಿದ್ಧಪಡಿಸಿದರೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬಹುದು ಎಂದರು.
ಮಿಮ್ಸ್ ನಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆಯ ಬಗ್ಗೆ ಸಂಸದರು ಪ್ರಸ್ತಾಪಿಸಿದಾಗ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತನಾಡಿ, ಇಂದು ಆಸ್ಪತ್ರೆಗೆ ಖುದ್ದು ಭೇಟಿ ನೀಡಿದ್ದು, ಬೇಕಿರುವ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಕ್ಯಾನ್ಸರ್ ಆಸ್ಪತ್ರೆಗೆ ಕಿದ್ವಯಿ ಆಸ್ಪತ್ರೆಯಿಂದ ತಜ್ಞ ವೈದ್ಯರನ್ನು ಸಹ ಕರೆಸಲಾಗುವುದು. ಮಿಮ್ಸ್ ಆಸ್ಪತ್ರೆಗೆ 1500 ಕೆ.ವಿ ಟ್ರನ್ಸ್ ಫಾರ್ಮರ್ ಅವಶ್ಯಕತೆ ಇದ್ದು, ಚೆಸ್ಕಂ ಅಧಿಕಾರಿಗಳಿಗೆ ಒದಗಿಸುವಂತೆ ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲ ಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.