ಮಂಡ್ಯ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಇರುವ ಶ್ರೀಸುಬ್ರಮಣ್ಯ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಧಾನ್ಯ ರಾಶಿ ಪೂಜೆ ಕಾರ್ಯಕ್ರಮ ನಡೆಯಿತು.
ಪೂಜೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭೇಟಿ ನೀಡಿ ಮಾತನಾಡಿ, ಸಂಕ್ರಾಂತಿ ಹಬ್ಬ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಮುಂದಿನ ದಿನಗಳಲ್ಲಿ ಒಳ್ಳೆಯ ಮಳೆಯಾಗಿ, ಸಮೃದ್ಧ ಬೆಳೆಯಾಗಿ ರೈತರ ಮೊಗದಲ್ಲಿ ನಗು ಮೂಡುವಂತಾಗಲಿ ಎಂದು ಹಾರೈಸಿದರು.
ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಜೆ.ಚಿಕ್ಕಣ್ಣ ಮಾತನಾಡಿ, ಸಂಕ್ರಾಂತಿ ಹಬ್ಬದ ಅಂಗವಾಗಿ ಸುಬ್ರಮಣ್ಯ ದೇವಸ್ಥಾನದಲ್ಲಿ ಧಾನ್ಯ ರಾಶಿಗೆ ಪೂಜೆ ಸಲ್ಲಿಸಲಾಗಿದೆ. ರೈತರು ದವಸ-ಧಾನ್ಯಗಳನ್ನು ಸಮೃದ್ಧಿಯಾಗಿ ಬೆಳೆದು ಅವರ ಮನೆಗಳಿಗೆ ತೆಗೆದುಕೊಂಡು ಹೋಗಲಿ. ರೈತರ ಬೆಳೆಗೆ ಉತ್ತಮ ಬೆಲೆ ಸಿಕ್ಕಿ ಅವರ ಬಾಳು ಹಸನಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳಿಗೆ ಸಿಹಿ ಪೊಂಗಲ್ ಹಾಗೂ ಕಾರ ಪೊಂಗಲ್ ವಿತರಿಸಲಾಯಿತು.