ಮದ್ದೂರು ತಾಲೂಕಿನ ಚಿಕ್ಕರಸಿನಕೆರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ನಗುವಿನಳ್ಳಿ, ಚಾಗಶೆಟ್ಟಹಳ್ಳಿ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲಾಗಿದೆ. ಈ ಗ್ರಾಮಗಳು ನಿರಂತರವಾಗಿ ತಂಬಾಕು ಮುಕ್ತವಾಗಿರುವಂತೆ ನೋಡಿಕೊಳ್ಳಿ ಎಂದರು.
ಕೋಟ್ಪಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ ವಿದ್ಯಾಸಂಸ್ಥೆಯ ಆವರಣದಿಂದ. 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ದಾಳಿ ನಡೆಸಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ನೊಟೀಸ್ ಜಾರಿ ಮಾಡಿ ಅಂಗಡಿಗಳ ಪರವಾನಗಿ ರದ್ದು ಮಾಡಿ ಎಂದರು.
ಜಿಲ್ಲೆಯಾದ್ಯಂತ ಹುಕ್ಕ ಬಾರ್ ಗಳನ್ನು ಪರಿಶೀಲಿಸಿ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತೆರವುಗೊಳಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಿ. ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಬಹಳಷ್ಟು ಗ್ರಾಮಗಳು ತಂಬಾಕು ಮುಕ್ತ ಗ್ರಾಮವಾಗಿದೆ. ಅವುಗಳ ಜನಸಂಖ್ಯೆ ಕಡಿಮೆ ಇದ್ದು, 2,200 ಜನಸಂಖ್ಯೆ ಹೊಂದಿರುವ ನಗುವಿನಹಳ್ಳಿ ಗ್ರಾಮ ತಂಬಾಕು ಮುಕ್ತವಾಗಿರುವುದು ರಾಷ್ಟ್ರಮಟ್ಟದಲ್ಲಿ ನಡೆದ ಕಾನ್ಫರೆನ್ಸ್ ನಲ್ಲಿ ಚರ್ಚೆಯಾಗಿ ಮೆಚ್ಚುಗೆಗೆ ಪಾತ್ರವಾಯಿತು ಎಂದು ತಂಬಾಕು ಕೋಶದ ರಾಜ್ಯ ಸಮನ್ವಯ ಅಧಿಕಾರಿ ಜೇಯಲ್ ಥಾಮಸ್ ಅವರು ಸಭೆಗೆ ಮಾಹಿತಿ ನೀಡಿದರು.
ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ತಂಬಾಕು ಕೋಶದವರು ಜಿಲ್ಲಾ ಕಾರಾಗೃಹ ಅಧೀಕ್ಷಕ ಲೋಕೇಶ್ ಅವರ ಸಹಭಾಗಿತ್ವದಲ್ಲಿ ಕಾರಾಗೃಹ ವಾಸಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉಚಿತ ಆಪ್ತಸಮಾಲೋಚನೆ ಹಾಗೂ ಚಿಕಿತ್ಸೆ ನೀಡುವುದರ ಮೂಲಕ 82 ಕಾರಾಗೃಹ ವಾಸಿಗಳನ್ನು ವ್ಯಸನ ಮುಕ್ತರನ್ನಾಗಿಸಿದ್ದಾರೆ. ಈ ವಿಷಯ ಕೂಡ ಕಾನ್ಫರೆನ್ಸ್ ನಲ್ಲಿ ಚರ್ಚೆಯಾಗಿ ಮೆಚ್ಚುಗೆಗೆ ಪಾತ್ರವಾಯಿತು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿ.ಪಂ. ಉಪ ಕಾರ್ಯದರ್ಶಿ (ಆಡಳಿತ) ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್ ಧನಂಜಯ್, ಡಿಡಿಪಿಐ ಜವರೇಗೌಡ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಭವಾನಿ ಶಂಕರ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಎಂ.ಡಿ ಸಂಜಯ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಆಶಾಲತಾ, ಸಂತಾನೋತ್ಪತ್ತಿ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ತಂಬಾಕು ಕೋಶದ ಸಲಹೆಗಾರ ತಿಮ್ಮರಾಜು ಎಸ್.ಎನ್, ರೆಡ್ ಕ್ರಾಸ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಐಎಂಎ ಅಧ್ಯಕ್ಷರಾದ ಡಾ.ಎಂ ಮರೀಗೌಡ, ಜಿಲ್ಲಾ ವಾರ್ತಾಧಿಕಾರಿ ನಿರ್ಮಲ, ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.