ಕಬ್ಬು ಕಟಾವು ಮಾಡುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೊಬ್ಬನ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ನಾಗತಿ ಬೆಳಗೊಳ ತಾಂಡಾದ ನಿವಾಸಿ ಜಯರಾಂ (55) ಗಾಯಗೊಂಡಿರುವ ಕಾರ್ಮಿಕ. ಈತ ಬೊಮ್ಮನಾಯಕನಹಳ್ಳಿ ಬಳಿ ತಾತ್ಕಾಲಿಕ ಶೆಡ್ನಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸಿಸುತ್ತಾ ನಿತ್ಯ ಕಬ್ಬು ಕಟಾವು ಕೆಲಸ ಮಾಡುತ್ತಿದ್ದರು.
ಘಟನೆ ವಿವರ
ಜಯರಾಮು ಮತ್ತು ತಂಡದವರು ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದ
ತಾಯಮ್ಮ ಕೋಂ ಹುರೀಗೌಡ ಎಂಬುವವರಿಗೆ ಸೇರಿದ ಜಮೀನಿನ ಬಳಿ ಭಾನುವಾರ ಬೆಳಿಗ್ಗೆ ಹನ್ನೊಂದು ಗಂಟೆಯ ವೇಳೆಗೆ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಕಡಿಯುತ್ತಿದ್ದ ವೇಳೆ, ಕಬ್ಬಿನ ಗದ್ದೆಯಲ್ಲಿಯೇ ವಾಸವಾಗಿದ್ದ ಚಿರತೆಯು ಜಯರಾಮು ಅವರ ಮೇಲೆರಗಿ ಅವರನ್ನು ಕಚ್ಚಿ ಗಾಯಗೊಳಿಸಿದೆ.
ಭಯಬೀತರಾದ ಕಬ್ಬು ಕಟಾವು ಮಾಡುತ್ತಿದ್ದ ಇತರೆ ಕಾರ್ಮಿಕರು ಕಬ್ಬು ಕಟಾವು ಮಾಡದೇ ವಾಪಸ್ಸಾಗಿದ್ದಾರೆ.
ಚಿರತೆ ದಾಳಿಯಿಂದ ಗಾಯಗೊಂಡಿರುವ ಜಯರಾಮು ಅವರನ್ನು ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ.
ಜಯರಾಮು ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ನಾಗತಿ ಬೆಳಗೊಳ ತಾಂಡಾದ ನಿವಾಸಿಯಾಗಿದ್ದು, ಕಳೆದ 3-4 ತಿಂಗಳಿನಿಂದ ಕೆ.ಆರ್.ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿ
ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ನಲ್ಲಿ ವಾಸವಿದ್ದು ನಿನ್ನೆ ರಾಯಸಮುದ್ರದ ಬಳಿ ಕಬ್ಬು ಕಡಿಯುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಘಟನೆಯ ವಿಚಾರ ತಿಳಿದ ತಕ್ಷಣವೇ ತಾಲ್ಲೂಕು ಆರ್.ಎಫ್.ಓ ಗಂಗಾಧರ್ ನೇತೃತ್ವದ ಅಧಿಕಾರಿಗಳ ತಂಡವು ಸ್ಥಳಕ್ಕೆ ಬೇಟಿ ನೀಡಿ ಚಿರತೆ ಸೆರೆಗೆ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ ಎಂದು ತಿಳಿಸಿದ್ದಾರೆ.