-
ಯಾವುದೆ ಪ್ರತಿಫಲಾಪೇಕ್ಷೆ ಇಲ್ಲದೇ ಕಾಂಗ್ರೆಸ್ ಪಕ್ಷ ಸೇರಲು ತೀರ್ಮಾನ
- ಮದ್ದೂರಿನ ‘ಕೈ’ ಬಿ ಫಾರಂ ಯಾರಿಗೆ ಎಂದು ಇನ್ನು ತೀರ್ಮಾನವಾಗಿಲ್ಲ
ಮದ್ದೂರು ವಿಧಾನಸಭಾ ಕ್ಷೇತ್ರದ ಯುವನಾಯಕ ಕದಲೂರು ಉದಯ್ ಅಂತಿಮವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ಮದ್ದೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನನ್ನ ಹಿತೈಷಿಗಳ ಸಲಹೆಯಿಂದ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲು ನಿರ್ಧರಿಸುವುದಾಗಿ ತಿಳಿಸಿದರು.
ಕಳೆದ ವಾರ ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ವ್ಯಕ್ತವಾದ ಸಲಹೆಯಂತೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾಂಗ್ರೆಸ್ ಪಕ್ಷ ಸೇರಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು, ಹಳೆ ಮೈಸೂರು ಭಾಗದಲ್ಲಿ ಪ್ರಬಲವಾಗಿರುವ ಜೆಡಿಎಸ್ ಪಕ್ಷಕ್ಕೆ ಪರ್ಯಾಯವಾಗಿರುವ ಸಂಘಟನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಕಾರಣದಿಂದ ಷರತ್ತಿಲ್ಲದೆ ಪಕ್ಷ ಸೇರ್ಪಡೆ ಮುಂದಾಗಿದ್ದೇನೆ ಎಂದರು.
ಮುಂಬರುವ ದಿನಗಳಲ್ಲಿ ರಾಜ್ಯ, ಜಿಲ್ಲಾ, ತಾಲ್ಲೂಕು ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗಧಿಪಡಿಸಲಾಗುವುದು. ಸೇರ್ಪಡೆ ಕಾರ್ಯಕ್ರಮದ ವಿವರವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ನಾನು ಪ್ರಸ್ತುತ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ರಾಷ್ಟ್ರೀಯ ಪಕ್ಷದ ವರಿಷ್ಟರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸುತ್ತೇನೆ. ನನಗೆ ಅವಕಾಶಕೊಟ್ಟರೆ ಸ್ಪರ್ಧಿಸುತ್ತೇನೆ, ಅನ್ಯರಿಗೆ ಅವಕಾಶ ಕೊಟ್ಟರೆ ಅವರ ಪರವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ವರಿಷ್ಟರಿಗೆ ಬಿಟ್ಟ ವಿಚಾರ. ಪಕ್ಷ ಬಲವರ್ಧನೆ ಹಾಗೂ ಪಕ್ಷ ಸೇವೆಯ ಮಾನದಂಡವನ್ನು ಗುರಿಯಾಗಿಟ್ಟು ಅಭ್ಯರ್ಥಿ ಆಯ್ಕೆ ನಡೆಯಲಿದೆ. ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಎಲ್ಲರೊಂದಿಗೆ ಸಾಮೂಹಿಕ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿಲು ತೀರ್ಮಾನಿಸಿದ್ದೇನೆ. ಪಕ್ಷದ ಬಿ ಫಾರಂ ವಿಚಾರವಾಗಿ ಯಾರಿಗೂ ಭರವಸೆ ಸಿಕ್ಕಿಲ್ಲ, ಪಕ್ಷದ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುತ್ತೇವೆ ಎಂದು ತಿಳಿಸಿದರು.