2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಸಮರ್ಪಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಚ್.ಕೃಷ್ಣ ಹೇಳಿದರು.
ಮಂಡ್ಯ ನಗರದ ಗುತ್ತಲು ಬಡಾವಣೆಯ ಸಾದತ್ನಗದಲ್ಲಿರುವ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಬ್ಲಾಕ ಘಟಕ ಆಯೋಜಿಸಿದ್ದ 2023ರ ವಿಧಾನಸಭೆ ಚುನಾವಣೆಯಲ್ಲಿನ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮತ್ತು ಪಕ್ಷದ ಯೋಜನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇನ್ನು ಕೇವಲ 50 ದಿನಗಳಲ್ಲಿ ಘೋಷಣೆಯಾಗಲಿದೆ, ಆಡಳಿತರೂಢ ಬಿಜೆಪಿ ಪಕ್ಷದ ಭ್ರಷ್ಟಾಚಾರ, ಧರ್ಮ- ಧರ್ಮಗಳ ನಡುವೆ ವೈಮನಸು ಬೆಳೆಸುತ್ತಿರುವ ಇಂತಹ ಕೆಟ್ಟ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರ ರಚನೆ ಸಂಕಲ್ಪ ಮಾಡಿ ಎಂದು ಮನವಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಹಣಕಾಸು ಕ್ರೋಢೀಕರಿಸಿ ವಿವಿಧ ಯೋಜನೆ ಜಾರಿಗೊಳಿಸಲು ಉದ್ದೇಶಿಸಿದೆ ಎಂದು ತಿಳಿಸಿದರು.
ಮಂಡ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿ ನಾನೂ ಒಬ್ಬನಾಗಿದ್ದೇನೆ, ಶಿಕ್ಷಣ, ಆರೋಗ್ಯ, ಗ್ರಾಮೀಣ-ನಗರಾಭಿವೃದ್ದಿ, ಸೇವಾ ಯೋಜನೆಗಳು ಸಮಗ್ರವಾಗಿ ನಮ್ಮ ಬಳಿ ತಲುಪಲಿವೆ. ಅಭ್ಯರ್ಥಿ ಯಾರೇ ಆಗಲಿ, ಕಾಂಗ್ರೆಸ್ ಗೆಲ್ಲಿಸುವುದೇ ನಿಮ್ಮ ಗುರಿಯಾಗಬೇಕಿದೆ ಎಂದು ಮನವಿ ಮಾಡಿದರು.
ರಾಜ್ಯ ಬಜೆಟ್ ನಲ್ಲಿ 1.20 ಸಾವಿರ ಕೋಟಿ ಹಣವನ್ನು ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಸರ್ಕಾರ ಬಳಸಿಕೊಳ್ಳಲಿದೆ ಮತ್ತು ಹಸಿವು, ಬಡತನ ಇನ್ನೂ ಹಲವು ವಿಷಯಗಳ ಬಗ್ಗೆ ಅರಿತಿದ್ದ ನಮ್ಮ ನಾಯಕರಾದ ಮಾಜಿ ಸಿದ್ದರಾಮಯ್ಯ ಅವರು ಹಲವು ಭಾಗ್ಯಗಳನ್ನು ರಾಜ್ಯದ ಜನತೆಗೆ ನೀಡಿ ಯಶಸ್ವಿ ಮುಖ್ಯಮಂತ್ರಿ ಆಗಿದ್ದರು ಎಂದು ಸ್ಮರಿಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಪ್ರತಿಯೊಬ್ಬ ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂ. ಪ್ರೋತ್ಸಾಹ ಧನ, ತಿಂಗಳಿಗೆ 10 ಕೆ.ಜಿ ಅಕ್ಕಿ ಕೊಡುವ ಭರವಸೆ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತಿದೆ. ಕಾರ್ಡ್ ವಿತರಣೆ ಜತೆಗೆ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ಸಲ್ಲಿಸಲಾಗುತ್ತದೆ. ಅಧಿಕಾರಕ್ಕೆ ಬಂದ ತಕ್ಷಣ ಮೊದಲ ತಿಂಗಳಿಂದಲೇ ಖಾತೆಗೆ ಹಣ, ಎಲ್ಲರಿಗೂ ಉಚಿತ ವಿದ್ಯುತ್ ಮತ್ತು 10 ಕೆ.ಜಿ ಅಕ್ಕಿ ಗ್ಯಾರಂಟಿಯಾಗಿ ಸಿಗಲಿದೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ ನೊಂದಣಿ ಪ್ರಕ್ರಿಯೆ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಕಾಂಗ್ರೆಸ್ ಮುಖಂಡ ಮುನವಾರ್ಪಾಷಾ, ನಗರ ಸಮಿತಿ ಅಧ್ಯಕ್ಷ ರುದ್ರಪ್ಪ, ಹೊಸಹಳ್ಳಿ ಶಿವಲಿಂಗೇಗೌಡ, ಯುವ ಮುಖಂಡ ಜಬೀವುಲ್ಲಾ, ಸೋಮು ಮತ್ತಿತರರಿದ್ದರು.