ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ದಲಿತ ಕಾಲೋನಿಯ ತೇರು ರಸ್ತೆಯ ಅಕ್ರಮ ಒತ್ತುವರಿ ತೆರವು ಮಾಡಿಸಿ, ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಚರಂಡಿ, ಮೂಲಭೂತ ಸೌಲಭ್ಯ ಕಲ್ಪಿಸಲಾಗದ ಪಂಚಾಯಿತಿ ರಾಜ್ ಇಲಾಖಾ ವೈಫಲ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಡ್ಯ ಜಿಲ್ಲಾ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದಲಿತ ಕಾಲೋನಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಅಡ್ಡಿಯಾಗಿರುವ ಅಧಿಕಾರಿಗಳು ಸೇರಿದಂತೆ ಅಕ್ರಮ ಒತ್ತುವರಿದಾರರ ಮೇಲೆ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ, ಜೈಲಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಸ್ಪಶ್ಯ ದಲಿತ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು ದಕ್ಕದಂತೆ ನೋಡಿಕೊಳ್ಳುವುದನ್ನೇ… ಸ್ವಾತಂತ್ರ್ಯ ಎಂದು ಕೊಂಡಿರುವ ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ದುರ್ವರ್ತನೆ ಖಂಡನೀಯ. ಭಾರತ ” ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲೂ ದಲಿತ ಸಮುದಾಯದ ಕುಂಟುಂಬಗಳಿಗೆ ಕನಿಷ್ಠ ಸೌಲಭ್ಯಗಳು ಇಲ್ಲವಾಗಿವೆ ಎಂದು ದೂರಿ ಜಿ.ಪಂ.ಸಿಇಓ ಶಾಂತ ಎಲ್.ಹುಲ್ಮನಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಸುರೇಶ್ ಕುಮಾರ್, ಆನಂದ್ ಮತ್ತಿತರರು ಉಪಸ್ಥಿತರಿದ್ದರು.