ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹಿಳಾ ಸಬಲೀಕರಣವು ದಿನೇ ದಿನೇ ಉತ್ತುಂಗಕ್ಕೆ ಏರುತ್ತಿದೆ, ಮಹಿಳೆಯರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಮಂಡ್ಯ ನಗರ ಸಭೆಯ ಅಧ್ಯಕ್ಷ ಹೆಚ್.ಎಸ್.ಮಂಜು ತಿಳಿಸಿದರು
ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ( ಡೇ- ನಲ್ಮ್ ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ 2022-23 ನೇ ಸಾಲಿನ ಅತ್ಯುತ್ತಮ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಶಿಕ್ಷಣಕ್ಕೆ ಮೊದಲು ಪ್ರಾಮುಖ್ಯತೆ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಮಾತನಾಡಿ, ದೇಶದಲ್ಲಿ ಹಲವಾರು ಮಹಿಳೆಯರು ಉನ್ನತ ಕ್ಷೇತ್ರದಲ್ಲಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ, ಒಂದು ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಲ್ಲಾಳು ಹಾಗೆಯೇ ಪ್ರತಿಯೊಂದು ಹೆಣ್ಣು ಮಗುವು ತನ್ನ ಸಂಸಾರಕೋಸ್ಕರ ದಿನನಿತ್ಯ ಶ್ರಮಿಸುತ್ತಾಳೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ 764 ಮಹಿಳಾ ಸ್ವಸಹಾಯ ಸಂಘ, ಗುಂಪುಗಳಿದ್ದು ಇದರಲ್ಲಿ 1,20,000 ಮಹಿಳೆಯರು ಸ್ವ ಉದ್ಯೋಗವನ್ನು ಮಾಡುತ್ತಿದ್ದಾರೆ. ಇದರ ಜೊತೆ ಹೊಸ ಯೋಜನೆಗಳನ್ನು ನಿರ್ಮಿಸಬೇಕು ಹಾಗೆಯೇ ಒಂದು ದೇಶದ ಬೆಳವಣಿಗೆಯಲ್ಲಿ ಮಹಿಳೆಯರ ಕೊಡುಗೆಯು ಅಪಾರವಾಗಿರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿರುವ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾದ 8 ಉತ್ತಮ ಸ್ವ-ಸಹಾಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ನ ಜಿಲ್ಲಾ ವ್ಯವಸ್ಥಾಪಕ ಎಂ. ಪಿ ದೀಪಕ್, ಬ್ಯಾಂಕ್ ಆಫ್ ಬರೋಡದ ಆರ್ಥಿಕ ಸಾಕ್ಷರತಾ ಸಂಯೋಜಕರಾದ ಕೆ.ಪಿ ಅರುಣಾಕುಮಾರಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎನ್. ಆರ್ ವೇಣುಗೋಪಾಲ್ ಹಾಗೂ ಇನ್ನಿತರರಿದ್ದರು.