ಸ್ವಷ್ಟ ಬಹುಮತದೊಂದಿಗೆ ಜೆಡಿಎಸ್ ಪಕ್ಷ ಅಧಿಕಾರ ಹಿಡಿಯುವುದು ಖಚಿತವಾಗಿದ್ದು, ಜೆಡಿಎಸ್ಗೆ ಮತ ಹಾಕುವುದರ ಮೂಲಕ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ರೈತ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಹಾಗೂ ಪಂಚರತ್ನ ಯೋಜನೆ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿರುವ ಪಂಚರತ್ನ ಯೋಜನೆಯಿಂದ ರಾಜ್ಯವು ಅಭಿವೃದ್ದಿಗೊಳ್ಳಲಿದೆ, ಉಚಿತ ಆರೋಗ್ಯ, ಶಿಕ್ಷಣ, ಯುವಕರಿಗೆ ಉದ್ಯೋಗ, ಮಹಿಳಾ ಸಬಲೀಕರಣ, ಕೃಷಿಗೆ ಹೊಸ ಕಾಯಕಲ್ಪ ಸೇರಿದಂತೆ ಅನೇಕ ಅಂಶಗಳು ಜೆಡಿಎಸ್ ಪಕ್ಷ ಅಧಿಕಾರ ಹಿಡಿಯಲು ಸಹಕಾರವಾಗಿದೆ ಎಂದರು.
ಸಣ್ಣ ಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆಗೆ ಮುಂದಾಗಬೇಕು, ನಿರ್ಲಕ್ಷ್ಯ ವಹಿಸಿದರೇ ಮುಂದಿನ ಐದು ವರ್ಷ ಸಂಕಷ್ಟ ಎದುರಿಸಬೇಕಾಗುತ್ತದೆ, ಯಾವುದೇ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚೆ ಮಾಡಿ ಬಗೆಹರಿಸಿಕೊಳ್ಳೋಣ. ಪಕ್ಷದ ವ್ಯತ್ಯಾಸಗಳನ್ನು ಹೊರಗಡೆ ಚರ್ಚೆ ಮಾಡಬೇಡಿ, ಇದರಿಂದ ಪಕ್ಷಕ್ಕೆ ತೊಂದರೆಯಾಗುತ್ತದೆ ಎನ್ನುವುದೇ ನೀವು ಅರ್ಥ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಯುವ ಜಿಲ್ಲಾಧ್ಯಕ್ಷ ಬಿ.ರವಿ ಕಂಸಾಗರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಮಾಡಲು ಎಲ್ಲರೂ ದುಡಿಯಬೇಕು, ಅಭಿವೃದ್ದಿ ಎಂಬುವುದು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಹೀಗಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ಶಕ್ತಿ ತುಂಬಬೇಕೆಂದು ಹೇಳಿದರು.
ಕೆಲವರನ್ನು ಕ್ಷೇತ್ರದ ಮಾಜಿ ಶಾಸಕರು ಬಲವಂತದಿಂದ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಅವರ ಅವಧಿಯಲ್ಲಿ ಜನರು ಅನುಭವಿಸಿ ನೋವಿನಿಂದ ಕಳೆದ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತ ಪಡೆದು ಗೆಲುವು ಸಾಧಿಸಿದ್ದೆ. ಈ ಬಾರಿಯೂ ಅಂಥ ಫಲಿತಾಂಶ ಬರಲಿದೆ ಎಂದರು.
ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಮಾತನಾಡಿ, ಜೆಡಿಎಸ್ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ, ಪಂಚರತ್ನ ಯೋಜನೆಯಲ್ಲಿರುವ ವಿಷಯಗಳನ್ನು ಜನ ಸಮಾನ್ಯರಿಗೆ ತಿಳಿಸುವ ಕೆಲಸವನ್ನು ಜೆಡಿಎಸ್ ಕಾರ್ಯಕರ್ತರು ಮಾಡಬೇಕಿದೆ, ರಾಜ್ಯದ ಹಾಗೂ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಜೆಡಿಎಸ್ ಬಂಬಲಿಸಬೇಕೆಂದು ಕೋರಿದರು.
ಪುರಸಭೆ ಉಪಾಧ್ಯಕ್ಷ ಎಂ.ಟಿ.ಪ್ರಶಾಂತ್, ಸದಸ್ಯರಾದ ಸಿದ್ದರಾಜು, ನಾಗೇಶ್, ಟಿ.ನಂದಕುಮಾರ್, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಡಿ.ಜಯರಾಮು, ಮುಖಂಡರಾದ ಮಲ್ಲೇಗೌಡ, ಶ್ರೀಧರ್ ಇದ್ದರು.