ವೇಗವಾಗಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಆಕೆಯ ಪತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ಪಟ್ಟಣದ ಸಮೀಪದ ಕನಕಪುರ ರಸ್ತೆಯ ಕ್ಯಾತೇಗೌಡನ ದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮಳವಳ್ಳಿ ತಾಲೂಕಿನ ಅಮೃತೇಶ್ವರನ ಹಳ್ಳಿ ಗ್ರಾಮದ ವಾಸಿ ಮಹದೇವ ಎಂಬುವರ ಪತ್ನಿ ಮಾಲಾಶ್ರೀ(27) ಎಂಬುವವರೇ ಮೃತಪಟ್ಟವರು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಹದೇವ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮಳವಳ್ಳಿ ಕಡೆಗೆ ತಮ್ಮ ಬೈಕ್ ನಲ್ಲಿ ಬರುತ್ತಿದ್ದ ಈ ದಂಪತಿಗಳಿಗೆ ಹಲಗೂರು ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಮಾಲಾಶ್ರೀ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.