ವರದಿ : ಪ್ರಭು ವಿ.ಎಸ್.
ಮೆ.10ರಂದು ನಿಗಧಿಯಾಗಿರುವ ವಿಧಾನಸಭೆ ಚುನಾವಣೆ ಸಂಬಂಧ ಮದ್ದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನ್ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆಂದು ತಾಲೂಕು ಬಿಜೆಪಿ ರೈತ ಮೋರ್ಚ ಅಧ್ಯಕ್ಷ ಸಿ.ಎಸ್. ಸತೀಶ್ ತಿಳಿಸಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸುದ್ಧಿಗೋಷ್ಠಿ ವೇಳೆ ಮಾತನಾಡಿದ ಅವರು ಮೇ.17ರ ಸೋಮವಾರ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿ ತಾಲೂಕು ಕಚೇರಿಯ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ತಾಲೂಕಿನ ಮಾಲಗಾರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಟ್ಟಣದ ಹೊಳೆಆಂಜನೇಯಸ್ವಾಮಿ, ಮದ್ದೂರಮ್ಮ ಹಾಗೂ ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದಿಂದ ಅಪಾರ ಕಾರ್ಯಕರ್ತರು ಸಾಂಸ್ಕೃತಿಕ ಕಲಾತಂಡಗಳೊಟ್ಟಿಗೆ ಮೆರವಣಿಗೆ ಕೈಗೊಂಡು ಪೇಟೇಬೀದಿ ಮೂಲಕ ತೆರಳಿ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಸಂಸದೆ ಸುಮಲತಾ ಅಂಬರೀಷ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾನ, ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕರ್ತರು, ಮುಖಂಡರು ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.