ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಪರ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಮತಯಾಚಿಸಿದರು.
ಮಂಡ್ಯದ ಗಾಂಧಿನಗರ ಮತ್ತು ಶಂಕರಮಠದಲ್ಲಿ ಮನೆ ಮನೆಗೆ ತೆರಳಿ ಜೆಡಿಎಸ್ ಪಕ್ಷದ ಕರಪತ್ರ ವಿತರಿಸಿ ಅಭ್ಯರ್ಥಿ ರಾಮಚಂದ್ರು ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಹೆಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಜನತೆಗಾಗಿ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಹೊರಟಿದ್ದಾರೆ. ಪಂಚರತ್ನ ಯೋಜನೆಗಳ ಜಾರಿಗಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕಿದೆ. ಕಳೆದ ಬಾರಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಈ ಬಾರಿಯೂ ಜನರು ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡಬೇಕೆಂದು ಮನವಿ ಮಾಡಿದರು.
ಆರೋಗ್ಯ, ಶಿಕ್ಷಣ, ವಸತಿ, ಯುವಜನ ಮತ್ತು ಮಹಿಳೆಯರ ಸಬಲೀಕರಣ ಹಾಗೂ ರೈತ ಉದ್ಧಾರಕ್ಕೆ ಕುಮಾರಸ್ವಾಮಿ ಪಣ ತೊಟ್ಟಿದ್ದು, ಪಂಚರತ್ನ ಯೋಜನೆಗಳ ಜಾರಿಯಿಂದ ರಾಜ್ಯ ಮತ್ತು ಜನತೆಯ ಅಭಿವೃದ್ಧಿ ಆಗಲಿದೆ ಎಂದರು.
ರಾಜ್ಯದ ಅಭ್ಯುದಯಕ್ಕಾಗಿ ಜೆಡಿಎಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿರುವ ಎಲ್ಲಾ ಭರವಸೆಗಳನ್ನು ಹೆಚ್. ಡಿ ಕುಮಾರಸ್ವಾಮಿ ಅವರು ಈಡೇರಿಸಲಿದ್ದಾರೆ. ಈ ಹಿಂದೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು.ಎಷ್ಟೋ ಅಡೆತಡೆಗಳಿದ್ದರೂ ರೈತರ ಸಾಲ ಮನ್ನಾ ಮಾಡುವ ಮೂಲಕ ನುಡಿದಂತೆ ನಡೆದುಕೊಂಡರು. ಅದೇ ರೀತಿ ಕುಮಾರಸ್ವಾಮಿಯವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ರೈತರ ಮತ್ತು ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ತುಳಸೀಧರ್ ಮತ್ತಿತರರು ಉಪಸ್ಥಿತರಿದ್ದರು.