ಕಾಂಗ್ರೆಸ್ ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ಜೂ.11ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಲಿದ್ದಾರೆಂದು ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಭರವಸೆ ನೀಡಿದಂತೆಯೇ ಶಕ್ತಿ ಯೋಜನೆಯನ್ನು ಜಾರಿ ಮಾಡುತ್ತಿದೆ, ಇದರಿಂದ ರಾಜ್ಯದಲ್ಲಿ ಸುಮಾರು ಶೇ.50ರಷ್ಟಿರುವ ಮಹಿಳೆಯರಿಗೆ ಅನುಕೂಲವಾಗಲಿದೆ, ಅವರು ಇನ್ನು ಮುಂದೆ ಬಸ್ ಪ್ರಯಾಣಕ್ಕೆ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಮಂಡ್ಯದಲ್ಲಿ ನಡೆಯುವ ”ಶಕ್ತಿ” ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು, ಆದ್ದರಿಂದ ಮಂಡ್ಯ ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ವಿಜಯಲಕ್ಷ್ಮಿ ರಘುನಂದನ್, ನಗರಸಭಾ ಸದಸ್ಯೆ ಪೂರ್ಣಿಮ, ಮಹಿಳಾ ಮುಖಂಡರಾದ ಶಕುಂತಲಾ, ರಾಧಾ, ಗೀತಾ ಮತ್ತಿತರರು ಉಪಸ್ಥಿತರಿದ್ದರು.