ಮಂಡ್ಯ ಜಿಲ್ಲಾ ಪಂಚಾಯತಿ ಆವರಣದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ವಿವಿಧ ಇಲಾಖೆ ಹಾಸ್ಟೆಲ್ ನಲ್ಲಿ ಕಳೆದ 10 -15 ವರ್ಷಗಳಿಂದ ಅಡುಗೆ ಸಹಾಯಕರಾಗಿ ಕಾವಲುಗಾರರಾಗಿ ಸ್ವಚ್ಛತಗಾರರಾಗಿ ಡಿ ಗ್ರೂಪ್ ನೌಕರರು ಕೆಲಸ ನಿರ್ವಹಿಸುತ್ತಾ ಬಂದಿದ್ದಾರೆ, ಆದರೆ ಈವರೆಗೂ ಸೌಲಭ್ಯ ಸಿಕ್ಕಿಲ್ಲ ಎಂದು ದೂರಿದರು.
ಡಿ ಗ್ರೂಪ್ ವರ್ಗದ ನೌಕರರಿಗೆ, ಹೊರಗುತ್ತಿಗೆ ಸಿಬ್ಬಂದಿಗಳಿಗೆ ನಿವೃತ್ತಿಯವರೆಗೂ ಸೇವಾ ಭದ್ರತೆ ಸಿಗುವಂತಾಗಬೇಕು. ಮಾಸಿಕ ವೇತನ ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗಬೇಕು, 2023 ಏಪ್ರಿಲ್ 1ರ ಕಾರ್ಮಿಕ ಇಲಾಖೆ ಆದೇಶದಂತೆ ಕನಿಷ್ಠ ವೇತನ ನೀಡಬೇಕು. ಕೆಲಸದ ಸಮಯ ನಿಗದಿಯಾಗಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ನೌಕರರ ಸಂಖ್ಯೆ ಕಡಿಮೆ ಮಾಡಿರುವ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಜನಪ್ರತಿನಿಧಿಗಳು ಹೊರಗುತ್ತಿಗೆ ನೌಕರರಾಗಿ ತೆಗೆದುಕೊಳ್ಳಬೇಕೆಂದು ನೀಡುವ ಶಿಫಾರಸು ಪತ್ರವನ್ನು ಪರಿಗಣಿಸಬಾರದು, ಇದರಿಂದ ಹಾಲಿ ಕೆಲಸ ನಿರ್ವಹಿಸುವ ನೌಕರರು ಕೆಲಸ ಕಳೆದುಕೊಳ್ಳುತ್ತಾರೆ. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಣಾ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರಿಗೆ ಮನವಿ ಸಲ್ಲಿಸಿದರು,
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಎಂ ಪುಟ್ಟಮಾದು, ಸಿಐಟಿಯು ನಾಯಕಿ ಸಿ.ಕುಮಾರಿ, ಪ್ರಧಾನ ಕಾರ್ಯದರ್ಶಿ ಕೆ ಹನುಮೇಗೌಡ, ನಂಜುಂಡಸ್ವಾಮಿ ಸೇರಿದಂತೆ ಇನ್ನಿತರರಿದ್ದರು.