ಮದ್ದೂರು ಪಟ್ಟಣದ ವ್ಯಾಪ್ತಿಯಲ್ಲಿ ಹರಿಯುವ ಸಂಪರ್ಕ ನಾಲೆಗಳಾದ ಬೈರನ್ ಮತ್ತು ವೈದ್ಯನಾಥಪುರ ಕಾಲುವೆಗಳಲ್ಲಿ ತುಂಬಿಕೊಂಡಿರುವ ಹೂಳನ್ನು ಕೂಡಲೇ ತೆರವುಗೊಳಿಸಿ ಸ್ವಚ್ಛಗೊಳಿಸುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಇಲಾಖೆ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕೂಡಲೇ ಕ್ರಮ ವಹಿಸುವಂತೆ ಆದೇಶಿಸಿದ್ದಾರೆ.
ಬೈರನ್ ಮತ್ತು ವೈದ್ಯನಾಥಪುರ ಕಾಲುವೆಗಳು ಮದ್ದೂರು ಪಟ್ಟಣದ ವ್ಯಾಪ್ತಿಯಲ್ಲಿ ಹರಿಯುವ ಸಂಪರ್ಕ ನಾಲೆಗಳಾಗಿದ್ದು, ಇಲ್ಲಿ ಹೂಳು ತುಂಬಿಕೊಂಡು ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ದೇಶಹಳ್ಳಿ ಕೆರೆಯ ಪ್ರಾರಂಭದಿಂದ ಈ ಎರಡು ನಾಲೆಗಳು ಹರಿಯುವ ಕೊನೆಯ ಭಾಗದವರೆಗೂ ಹೂಳು ತುಂಬಿಕೊಂಡಿದ್ದು, ರೈತರ ಸಾವಿರಾರು ಎಕರೆಗೆ ಸರಾಗವಾಗಿ ನೀರು ಹರಿಯುತ್ತಿಲ್ಲ. ಇದರಿಂದ ಕೃಷಿ ಚಟುವಟಿಕೆಗೆ ಬಹಳವೇ ಸಮಸ್ಯೆಯಾಗುತ್ತಿದೆ ಎಂದು ದಿನೇಶ್ ಗೂಳಿಗೌಡ ಅವರು ಮನವಿ ಪತ್ರದಲ್ಲಿ ಕೋರಿದ್ದರು.
ನೀರು ಜಮೀನುಗಳಿಗೆ ಸಮರ್ಪಕವಾಗಿ ಹರಿಯದೇ ಇರುವುದರಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗುತ್ತಿವೆ. ಆದುದರಿಂದ, ಶೀಘ್ರದಲ್ಲಿ ಈ ಎರಡು ಕಾಲುವೆಗಳಲ್ಲಿನ ಹೂಳನ್ನು ತೆಗೆಯಲು ಸಂಬಂಧಪಟ್ಟವರಿಗೆ ಸೂಚಿಸಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಕೋರಿದ್ದರು. ಈ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈಗ, ಸ್ವಚ್ಛಗೊಳಿಸುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.