ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ ಒತ್ತು ನೀಡಿದ್ದು, ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದೆ, ಅಲ್ಲದೇ ಮನೆಯ ಯಜಮಾನಿಗೆ ತಿಂಗಳಿಗೆ ₹ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಅರ್ಜಿ ಸ್ವೀಕರಿಸುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ 2022–23ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳೆಯರು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ರಾಜಕೀಯ, ಸಿನಿಮಾ ಕ್ಷೇತ್ರ, ವಿಜ್ಞಾನ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಇದು ಮಹಿಳಾ ಸಬಲೀಕರಣಕ್ಕೆ ಇಟ್ಟ ದಾಪುಗಾಲಾಗಿದೆ ಎಂದರು.
ಮಹಿಳೆಯರಲ್ಲಿ ಪ್ರಮಾಣಿಕತೆ, ಜವಾಬ್ದಾರಿ ಹೆಚ್ಚಿದೆ. ಕುಟುಂಬವನ್ನು ಒಟ್ಟಿಗೆ ಕರೆದೊಯ್ಯುವ ಸಾಮಾರ್ಥ್ಯವಿದೆ ಆಗಾಗಿ ನಮ್ಮ ಸರ್ಕಾರ ಮಹಿಳೆಯರನ್ನು ಅರ್ಥಿಕವಾಗಿ ಅಭಿವೃದ್ಧಿ ಪಡಿಸಲು ಅನುದಾನ ನೀಡಿದೆ ಎಂದರು.
ಮಂಡ್ಯ ನಗರದಲ್ಲಿರುವ ಮಹಿಳಾ ಕಾಲೇಜಿನಲ್ಲಿ ಸುಮಾರು 2,500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ತಮಗೆ ಸಂತಸ ತಂದಿದೆ. ಪ್ರಸ್ತುತ ಮಹಿಳೆಯರು ಎಲ್ಲ ರಂಗದಲ್ಲೂ ಚಾಪು ಮೂಡಿಸುತ್ತಿದ್ದಾರೆ. ಅದಕ್ಕಾಗಿಯೇ ನಮ್ಮ ಸರ್ಕಾರವು ಅವರಿಗೆ ಪ್ರೋತ್ಸಾಹದಾಯಕವಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ, ಇವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾಲೇಜಿನ ಅಭಿವೃದ್ದಿಗೆ ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದೀರಿ, ಇದನ್ನು ಇಲ್ಲಿನ ಯುವ ಶಾಸಕ ರವಿಕುಮಾರ್ ಅವರ ನೇತೃತ್ವದಲ್ಲಿ ಈಡೇರಿಸುತ್ತೇವೆ, ಹಂತ ಹಂತವಾಗಿ ಎಲ್ಲ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ದಶರಥ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ವಿಮರ್ಶಕರಾದ ಮೈಸೂರು ಕೃಷ್ಣಮೂರ್ತಿ, ಪಿಎಸ್ಐ ವರ್ಷ ಸೇರಿದಂತೆ ಇನ್ನಿತರರು ಹಾಜರಿದ್ದರು.