ಮಂಡ್ಯ ತಾಲ್ಲೂಕಿನ ಶಿವಳ್ಳಿ ಸಮೀಪದ ತಿಬ್ಬನಹಳ್ಳಿ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದು ಚಾಲಕ ಸಾವನ್ನಪ್ಪಿದ್ದಾನೆ.
ನಾಲೆಯ ನೀರಿನ ರಭಸಕ್ಕೆ ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್(48) ಕೊಚ್ಚಿ ಹೋಗಿದ್ದು,
ಅಗ್ನಿಶಾಮಕ ಸಿಬ್ಬಂದಿಗಳಿಂದ ಕೊಚ್ಚಿ ಹೋದ ವ್ಯಕ್ತಿಗೆ ಹುಡುಕಾಟದಲ್ಲಿ ತೊಡಗಿದ್ದಾರೆ.
ಉರುಳಿ ಬಿದ್ದ ಕಾರು ನೀರಿನಲ್ಲಿ ಮುಳುಗಿದ ಪರಿಣಾಮ, ಚಾಲಕ ನೀರು ಪಾಲಾಗಿದ್ದು, ಈತನನ್ನು ಶಿವಳ್ಳಿ ಗ್ರಾಮದ ಲೋಕೇಶ್ ಎಂದು ಗುರುತಿಸಲಾಗಿದೆ. ಮತ್ತೊರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕೆಆರ್’ಎಸ್ ನಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಟ್ಟಿರುವುದರಿಂದ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿತ್ತು. ಸುಮಾರು 18 ಅಡಿ ಆಳದ ನಾಲೆಯಲ್ಲಿ ಕಾರು ಮುಳುಗಿದ್ದು, ಇದರಿಂದ ಲೋಕೇಶ್ ಪಾರಾಗಲು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಕಾರನ್ನು ಮೇಲಕೆತ್ತಲು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್ ಇಟ್ಟುಕೊಂಡು ಜೊತೆಗೆ ವ್ಯವಸಾಯ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದ ಲೋಕೇಶ್, ತಮ್ಮ ಸ್ನೇಹಿತನ ಜೊತೆಗೂಡಿ ಸ್ವಿಫ್ಟ್ ಕಾರಿನಲ್ಲಿ ಕಾರ್ಯನಿಮಿತ್ತ ಪಾಂಡವಪುರಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.