Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಲೇರಿಯಾ ನಿರ್ಮೂಲನೆ ಮಾಡಿ ಜೀವ ಉಳಿಸೋಣ

2025ರ ವೇಳೆಗೆ ಮಲೇರಿಯಾ ಮುಕ್ತ ಕರ್ನಾಟಕ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು,ಎಲ್ಲರೂ ಮಲೇರಿಯಾ ರೋಗ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದರು.

ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಇಲಾಖೆ ವತಿಯಿಂದ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯವನ್ನು 2025ಕ್ಕೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಘೋಷಿಸಲು ಮಲೇರಿಯಾ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ. ಅದರಂತೆ ಮಂಡ್ಯ ಜಿಲ್ಲೆಯಲ್ಲೂ ರೋಗ ನಿಯಂತ್ರಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಆರೋಗ್ಯ ಇಲಾಖೆ ಕೈಗೊಂಡ ನಿಯಂತ್ರಣ ಕ್ರಮಗಳಿಂದ ಮಲೇರಿಯಾ ಹತೋಟಿಗೆ ಬಂದಿದೆ. ಚರಂಡಿ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಮಲೇರಿಯಾ ಹರಡುತ್ತದೆ. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಡೆಂಗ್ಯೂ ಬರುತ್ತದೆ. ಡೆಂಗ್ಯೂ ಪ್ರಕರಣಗಳು ಕಳೆದ ಎರಡು ವರ್ಷದಲ್ಲಿ ೪ರಿಂದ ೫ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಮಲೇರಿಯಾ ರೋಗಕ್ಕೆ ಮೊದಲ ಬಾರಿಗೆ ವ್ಯಾಕ್ಸಿನ್ ಕಂಡು ಹಿಡಿಯಲಾಗಿದೆ. ಆದರೂ ಜ್ವರ ಬಂದಾಗ ಸೂಕ್ತ ಚಿಕಿತ್ಸೆ ಪಡೆಯುವುದು ಸೂಕ್ತ ಎಂದರು. ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆ ಪರದೆ, ಕಿಟಕಿಗಳಿಗೆ ಜಾಲರಿ ಬಳಸಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆಯಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸೊಳ್ಳೆಗಳು ಉತ್ಪತ್ತಿಯಾಗುವ ಕೆರೆ, ಹೊಂಡ, ಕಲ್ಲು ಕ್ವಾರಿ ಸೇರಿದಂತೆ ಇತರೆಡೆ ಸೊಳ್ಳೆಗಳ ಮೊಟ್ಟೆ ಹಾಗೂ ಮರಿಗಳನ್ನು ತಿನ್ನುವ ಗ್ಯಾಂಬೋಸಿಯಾ, ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ ಎಂದರು.

ಕಾರ್ಯಾಗಾರದಲ್ಲಿ ಮಲೇರಿಯಾ ಕುರಿತ ಮಾಧ್ಯಮ ಪ್ರತಿನಿಧಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಅಂಕಿ-ಅಂಶಗಳ ಕುರಿತ ಮಾಹಿತಿ ನೀಡಲಾಯಿತು. ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಭವಾನಿಶಂಕರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ಮಂಜುನಾಥ್,ಕೀಟ ಶಾಸ್ತ್ರಜ್ಞೆ ಜಾನೆಟ್, ಆರೋಗ್ಯ ಶಿಕ್ಷಣಾಧಿಕಾರಿ ಡಾ‌.ಎನ್.ಜಿ.ವೇಣುಗೋಪಾಲ್, ವಾರ್ತಾಧಿಕಾರಿ ನಿರ್ಮಲ, ಡಾ.ಶಾಲಿನಿ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!