ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 77 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯು ಮಂಡ್ಯನಗರದ ಪಿ.ಇ.ಟಿ. ಕ್ರಿಕೆಟ್ ಮೈದಾನದಲ್ಲಿ ನಡೆಯಿತು.
ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಬ್ಯಾಟಿಂಗ್ ಮಾಡುವುದರ ಮೂಲಕ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, 77ನೇ ಸ್ವಾತಂತ್ರೊತ್ಸವದ ಅಂಗವಾಗಿ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಇದರಲ್ಲಿ ಮಾದ್ಯಮ ಮಿತ್ರರು ಹಾಗೂ ವಿವಿಧ ಇಲಾಖೆಯವರು ಒಂದೆಡೆ ಸೇರಲು ಇದು ಉತ್ತಮ ವೇದಿಕೆಯಾಗಿದೆ. ಕೆಲಸದ ಒತ್ತಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ವಿರಾಮ ನೀಡಲು ಈ ಸ್ವರ್ಧೆ ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.
ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗುವುದರಿಂದ ನಮ್ಮ ದೇಹದ ಆರೋಗ್ಯ ಕಾಪಾಡುಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಆರೋಗ್ಯಕರ ಮನಸ್ಸು ಇದ್ದರೆ ಮಾತ್ರ ಆರೋಗ್ಯಕರ ದೇಹ ರೂಪಿಸುವುದಕ್ಕೆ ಸಾಧ್ಯ. ಆಗಾಗಿ ಮನಸ್ಸು ಮತ್ತು ದೇಹ ಎರಡನ್ನು ಸಮತೋಲನದಲ್ಲಿ ನೋಡಿಕೊಳ್ಳುವಲ್ಲಿ ಕ್ರೀಡೆ ಒಂದು ಉತ್ತಮ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ. ಆಟದಲ್ಲಿ ಸೋಲು ಗೆಲುವು ಸಾಮಾನ್ಯವಾಗಿರುತ್ತದೆ ಅದನ್ನ ಸ್ಪರ್ಧಾರ್ಥಿಗಳು ಸಮಾನವಾಗಿ ಸ್ವೀಕರಿಸಿ ತೀರ್ಪುಗಾರರ ತೀರ್ಪಿಗೆ ಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.
ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ನಗರಸಭೆ, ಜಿಲ್ಲಾ ಪತ್ರಕರ್ತರ ಸಂಘ ದ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸ್ಪರ್ಧೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೊದಲ ಸ್ಥಾನ, ಪೊಲೀಸ್ ಇಲಾಖೆ ಎರಡನೇ ಸ್ಥಾನ ಪಡೆಯಿತು.