ಕೃಷ್ಣರಾಜಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕೆ.ಆರ್.ಎಸ್ ಅಣೆಕಟ್ಟೆ ಮುಂಭಾಗದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತಸಂಘದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಅಣೆಕಟ್ಟೆ ಇನ್ನೂ ಭರ್ತಿಯಾಗಿಲ್ಲದಿದ್ದರೂ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದು ಖಂಡನೀಯ. ಮಂಡ್ಯ ಜಿಲ್ಲೆಯ ರೈತರ ಹಿತವನ್ನು ಬಲಿ ಕೊಟ್ಟು ಅಣೆಕಟ್ಟೆಯಿಂದ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆಯನ್ನು ಕೂಗಿದ ರೈತಸಂಘದ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಪರಿಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಮನದಟ್ಟು ಮಾಡಿಸಿ ಜಿಲ್ಲೆಯ ರೈತರ ಹಿತವನ್ನು ಕಾಪಾಡಬೇಕೆಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.
ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೀರು ಬಿಡುಗಡೆ ಮಾಡುತ್ತಿರುವ ಬಗ್ಗೆ ರೈತರು ಬೇಕಾದರೆ ನ್ಯಾಯಲಯಕ್ಕೆ ಹೋಗಲಿ ಎಂದು ಹೇಳಿರುವುದು ನಾಚಿಕೆಗೇಡು. ಸರ್ಕಾರದ ಸಚಿವರಾಗಿ ನಾಡಿನ ರೈತರ ಹಿತದ ಬಗ್ಗೆ ಚಿಂತಿಸದೆ ಉಡಾಫೆಯಾಗಿ ವರ್ತಿಸಿದ್ದಾರೆ. ಜಲಾಶಯದ ಅಚ್ಚು ಕಟ್ಟು ಪ್ರದೇಶದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಟ್ಟು, ತಮಿಳುನಾಡಿಗೆ ಮಾತ್ರ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿದ್ದಾರೆ. ಈ ತಕ್ಷಣ ನದಿಗೆ ಬಿಡಲಾಗಿರುವ ನೀರು ಸ್ಥಗಿತಗೊಳಿಸಿ ನಾಲೆಗಳಿಗೆ ನಿರಂತರ ನೀರು ಹರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಪ್ರಸನ್ನಗೌಡ, ಜಯರಾಮೇಗೌಡ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.