ಮಂಡ್ಯ ಜಿಲ್ಲೆಯಾದ್ಯಂತ ಜನರು ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ಜನರು ಮನೆಗಳಲ್ಲಿ ಮಹಾಲಕ್ಷ್ಮಿ ಪೂಜೆ ನೆರವೇರಿಸಿ ದೇವರ ಕೃಪೆಗೆ ಪಾತ್ರರಾದರು.
ಮಂಡ್ಯ ನಗರದ ಶ್ರೀಮಹಾಲಕ್ಷ್ಮಿ ದೇವಿ ದೇವಾಲಯದಲ್ಲಿ ದೇವರಿಗೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದರು.
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಕೋಟೆ ಬೀದಿಯಲ್ಲಿರುವ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮಿದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಜಿಲ್ಲೆಯ ಎಲ್ಲೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಜನರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡು ಬಂತು. ಹಲವು ದೇವಾಲಯಗಳಿಗೆ ದೇವರಿಗೆ ವಿವಿಧ ಬಗೆಯ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಅದರಲ್ಲೂ ಮಹಾಲಕ್ಷ್ಮಿ ದೇವಸ್ಥಾನಗಳಲ್ಲಿ ಅದ್ದೂರಿಯಾಗಿ ಹೂವುಗಳಿಂದ ದೇವಿಗೆ ಅಲಂಕಾರ ಮಾಡಲಾಗಿತ್ತು. ದೇವಿಗೆ ಚಿನ್ನಾಭರಣದ ಅಲಂಕಾರ ಮೆರಗು ತಂದಿತ್ತು. ಹಲವು ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಮಹಿಳೆಯರು,ಹೆಣ್ಣು ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆಯಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಟಾಪಿಸಿ ಪೂಜೆ ಸಲ್ಲಿಸಿ ಭಕ್ತಿ ಮೆರೆದರು.