ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ. ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಬಿಜೆಪಿಯಲ್ಲಿ ಸಾಕಷ್ಟು ಜನ ನೊಂದಿದ್ದಾರೆ. ಸಂಕಟಪಡುತ್ತಿದ್ದಾರೆ. ಬಿಜೆಪಿಯಿಂದ ಹೊರಗೆ ಬರಲು ಬಹಳಷ್ಟು ಜನ ತಯಾರಿದ್ದಾರೆ” ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ತಮ್ಮ ಜೊತೆ ಮಾತನಾಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನನಗೆ ಬಿಜೆಪಿ ಹೈಕಮಾಂಡ್ನಿಂದ ಯಾವುದೇ ಕರೆ ಬಂದಿಲ್ಲ. ದೆಹಲಿಯ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಕರೆ ಬಾರದೆ ಈ ರೀತಿ ಚರ್ಚೆಗಳೆಲ್ಲ ಏಕೆ” ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಸಿಗದ ಅವಕಾಶದ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯಲ್ಲಿ ಏನಾಗುತ್ತದೆ ಎನ್ನುವ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ” ಎಂದು ಕಿಡಿ ಕಾರಿದರು.
“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತದೆ. ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ 12ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ” ಎಂದರು.