ಕಾವೇರಿ ಉಳಿವಿಗಾಗಿ ಒತ್ತಾಯಿಸಿ ಸೆ.11ರಂದು ಮಂಡ್ಯ ನಗರ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟದಲ್ಲಿ ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಗದಗ ಜಿಲ್ಲೆ, ಹಾವೇರಿ, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸುವರು ಎಂದರು.
ಕರ್ನಾಟಕದ ಸಂಸದರು ದಿವ್ಯ ಮೌನ ಏಕೆ? ಕನ್ನಡ ಚಲನಚಿತ್ರ ರಂಗದವರು, ಕಿರುತೆರೆ ಧಾರಾವಾಹಿ ತಂಡ, ನಟ ನಟಿಯರು ಕಾವೇರಿ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ ಏಕೆ ? ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗೂಡಿ ಬೀದಿಗಿಳಿಯಬೇಕು ಎಂದು ಒತ್ತಾಯಿಸಿದರು.
ಇಮ್ಮಡಿ ಪುಲಿಕೇಶಿ ಪ್ರತಿಮೆ ಸ್ಥಾಪನೆಗೆ ಆಗ್ರಹ
ಕರುನಾಡ ಕೀರ್ತಿ ಚಾಲುಕ್ಯ ಪರಮೇಶ್ವರ ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಬೆಂಗಳೂರು ವಿಧಾನಸೌಧ ಮುಂದೆ ಹಾಗೂ ಎಲ್ಲಾ ಜಿಲ್ಲೆಗಳ ಕೇಂದ್ರಗಳಲ್ಲಿ ಸ್ಥಾಪಿಸಬೇಕು. ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಪ್ರತಿಮೆ ಅನಾವರಣಕ್ಕೆ ಸ್ಥಳ ನಿಗದಿ ಮಾಡಬೇಕು. ಅಲ್ಲದೇ ಜಗಜ್ಯೋತಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಎಲ್ಲಾ ಜಿಲ್ಲಾಗಳಲ್ಲಿ ಸ್ಥಳಾವಕಾಶ ನೀಡಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಎಸ್.ಶಿವಕುಮಾರ್, ರಾಜ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯರಾದ ಅರಾಧ್ಯ ಗುಡಗೇನಹಳ್ಳಿ, ಥಾಮಸ್ ಬೆಂಜಮಿನ್ ಕಿಟ್ಟಿ ಉಪಸ್ಥಿತರಿದ್ದರು.