ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಸ್ಥಾನವನ್ನು ಅಸಿಂಧು ಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಪ್ರಜ್ವಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು.
ವಿಚಾರಣೆ ವೇಳೆ ಅನರ್ಹತೆ ಆದೇಶಕ್ಕೆ ತಡೆ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದ ಅರ್ಜಿದಾರ ದೇವರಾಜೇಗೌಡ ಅವರ ಪರ ವಕೀಲರು, ಈಗಾಗಲೇ ಲೋಕಸಭೆಗೆ ಅನರ್ಹತೆ ಮಾಹಿತಿ ನೀಡಿರುವುದರಿಂದ ಆದೇಶಕ್ಕೆ ತಡೆ ನೀಡಲು ಬರುವುದಿಲ್ಲ ಎಂದು ವಾದಿಸಿದರು.
ಚುನಾವಣಾ ಅಕ್ರಮದ ಆಧಾರದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ.