ತಮಿಳುನಾಡಿಗೆ ಒಂದು ಹನಿ ನೀರು ಬಿಡದಿರುವ ತೀರ್ಮಾನವನ್ನು ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿರ್ಣಯ ಕೈಗೊಂಡಿದೆ.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಇಂದಿನಿಂದ ಮತ್ತೇ ಧರಣಿ ಆರಂಭಿಸಿದ ಸಮಿತಿಯ ಮುಖಂಡರು, ಕನ್ನಡಪರ ಹೋರಾಟಗಾರರು ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ನೀರು ಬಿಡದಿರುವ ತೀರ್ಮಾನಕ್ಕೆ ಸರ್ಕಾರ ಬದ್ದವಾಗಿರಬೇಕೆಂದು ಆಗ್ರಹಿಸಿದರು.
ಸಂಕಷ್ಟದ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ರೂಪಿಸಬೇಕು, ರಾಜ್ಯದ ಸಂಸದರು ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿಗಳ ಮೇಲೆ ಒತ್ತಡ ತಂದು ತಮಿಳುನಾಡಿಗೆ ನೀರು ಹರಿಸುವುದನ್ನು ತಡೆಹಿಡಿಯುವ ಪ್ರಯತ್ನ ಮಾಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಕಾವೇರಿ ಕಣಿವೆ ಜಲಾಶಯ ಗಳಲ್ಲಿನ ನೀರಿನ ಪ್ರಮಾಣ ಅನುಸಾರ ಬೆಳೆ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಶೀಘ್ರ ಸಂಕಷ್ಟ ಸೂತ್ರ ರೂಪಿಸಬೇಕು ಎಂದು ನಿರ್ಣಯ ಮಾಡಲಾಯಿತು.
ಇದೆ ವೇಳೆ ಕಾವೇರಿ ಹೋರಾಟ ಒಂದೇ ವೇದಿಕೆಯಲ್ಲಿ ನಡೆಯುವಂತೆ ಹೋರಾಟಗಾರರು ಸಹಕರಿಸುವಂತೆ ಮನವಿ ಮಾಡಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ತೀರ್ಮಾನದ ನಂತರ ಸಮಿತಿಯ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ನಿರ್ಧರಿಸಲು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಮುಖಂಡರಾದ ಎಂ.ಎಸ್.ಆತ್ಮಾನಂದ, ಸುನಂದಾ ಜಯರಾಂ, ಕೆ ಬೋರಯ್ಯ, ಮಾಜಿ ಶಾಸಕರಾದ ಜಿ.ಬಿ.ಶಿವಕುಮಾರ್, ಕೆ.ಟಿ ಶ್ರೀಕಂಠೇಗೌಡ. ಅಂಬುಜಮ್ಮ, ರೈತಸಂಘದ ಇಂಡುವಾಳು ಚಂದ್ರಶೇಖರ್, ಕೀಲಾರ ಕೃಷ್ಣ, ದಸಂಸ ಮುಖಂಡ ಎಂ. ವಿ ಕೃಷ್ಣ ಮತ್ತಿತರರಿದ್ದರು.