ಮಂಡ್ಯನಗರದ ಮಹಾವೀರ ವೃತ್ತದಿಂದ ಪೇಟೆಬೀದಿಗೆ ಹಾದು ಹೋಗುವ ರೈಲ್ವೇ ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ನಡುವೆ ಕಾಮಗಾರಿ ಮುಗಿಯುವವರಗೆ ಈ ಮಾರ್ಗದಲ್ಲಿ ಸಂಚರಿಸಲು ಇದೇ ಸ್ಥಳದಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ನಾಗರೀಕರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಬ್ಬ ಹರಿದಿನಗಳು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಇಲ್ಲಿ ಓಡಾಡಲು ವ್ಯವಸ್ಥೆ ನಡೆಸಿದರೆ ಗ್ರಾಹಕರು ಮತ್ತು ವ್ಯಾಪಾರಿಗಳ ವಹಿವಾಟಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದರು. ಸಾರ್ವಜನಿಕರ ಅಹವಾಲನ್ನು ಆಲಿಸಿ ಶಾಸಕರು, ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.