ಮಕ್ಕಳಲ್ಲಿ ಅವ್ಯಕ್ತವಾಗಿರುವ ಸುಪ್ತ ಪ್ರತಿಭೆಯನ್ನು ಹೊರಚಿಮ್ಮಿಸಿ ಸಾಧನೆ ಮಾಡುವಂತೆ ಉತ್ತೇಜಿಸಲು ಪ್ರತಿಭಾ ಕಾರಂಜಿಯು ಸೂಕ್ತವಾದ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಂ ಹೇಳಿದರು.
ಕೆ.ಆರ್.ಪೇಟೆ ಪಟ್ಟಣದ ಕೆಪಿಎಸ್ ಸ್ಕೂಲ್ ಆವರಣದಲ್ಲಿ ತಾಲೂಕಿನ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ನಾಯಕರಾಗುತ್ತಾರೆ, ಆದ್ದರಿಂದ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮವಾದ ಸಂಸ್ಕಾರ ಸೇರಿದಂತೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತೆ
ಪ್ರೋತ್ಸಾಹಿಸಿ ಬೆನ್ನುತಟ್ಟಿದರೆ ಸಾಕು ಮಕ್ಕಳು ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ವಿಕಾಸಗೊಳಿಸಿಕೊಂಡು ಸರ್ವಶ್ರೇಷ್ಠ ಸಾಧನೆಯನ್ನು ಮಾಡುತ್ತಾರೆ. ಆದ್ದರಿಂದ ಮಕ್ಕಳಿಗೆ ಪಠ್ಯದ ಜೊತೆಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪ್ರೋತ್ಸಾಹ ನೀಡಿ ಅವರ ಅಭಿರುಚಿ ಹಾಗೂ ಕಲಿಕಾ ಆಸಕ್ತಿಗೆ ಅನುಗುಣವಾಗಿ ಮಾರ್ಗದರ್ಶನ ನೀಡಿ ಮುನ್ನಡೆಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ್ ಮಾತನಾಡಿ, ಇಂದು ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವು ದೊರೆಯುತ್ತಿದೆ. ಗ್ರಾಮೀಣ ಪ್ರದೇಶಧ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಬಲವಾದ ಸ್ಪರ್ಧೆಯನ್ನು ನೀಡಿ ಸಾಧನೆ ಮಾಡುತ್ತಿದ್ದಾರೆ. ಮನಸ್ಸಿದ್ದಲ್ಲಿ ಮಾರ್ಗವಿದೆಯಾದ್ದರಿಂದ ಮಕ್ಕಳು ತಮ್ಮಲ್ಲಿನ ವಿಶೇಷ ಸಾಮರ್ಥ್ಯವನ್ನು ಅನಾವರಣ ಮಾಡಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪ ಪ್ರಾಂಶುಪಾಲ ತಿಮ್ಮೇಗೌಡ, ಸಂಪನ್ಮೂಲ ಶಿಕ್ಷಕರಾದ ನೀಲಾಮಣಿ, ವಿಜಿನಾರಾಯಣ,
ಕೈಗೋನಹಳ್ಳಿ ನಂದಕುಮಾರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಾಸುದೇವ, ಸದಸ್ಯರಾದ ಲಕ್ಷ್ಮಿಪ್ರಸನ್ನ, ಕೆ.ಆರ್.ನೀಲಕಂಠ, ಶಾಮಿಯಾನ ತಿಮ್ಮೇಗೌಡ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ
ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.