‘ತಮಿಳುನಾಡಿಗೆ ನೀರು ಬಿಡಿ’ ಎಂಬ ಸುಪ್ರೀಂ ಕೋರ್ಟ್ ಅದೇಶವನ್ನು ಖಂಡಿಸಿ ಮಂಡ್ಯ ಜಿಲ್ಲಾ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯು ಸೆ.23ರಂದು ಮಂಡ್ಯ ಬಂದ್ ಗೆ ಕರೆ ನೀಡಿದೆ.
ಕಾವೇರಿ ನೀರಿನ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿ ಪಕ್ಷಾತೀತ ಹಾಗೂ ಪ್ರಗತಿಪರ ಸಂಘಟನೆಗಳ ಸಭೆ ನಡೆಸಿ ಕಾವೇರಿ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ ಆದೇಶದ ಬಗ್ಗೆ ಚರ್ಚಿಸಿ ಹಲವು ತೀರ್ಮಾನಗಳನ್ನು ಕೈಗೊಂಡಿದೆ.
ಸುಪ್ರಿಂಕೋರ್ಟ್ ತೀರ್ಪನ್ನು ಸಮಿತಿಯ ನೇತೃತ್ವದ ಸಭೆ ಒಕ್ಕೋರಲಿನಿಂದ ತೀವ್ರವಾಗಿ ಖಂಡಿಸಿದ್ದು, ಕರ್ನಾಟಕ ಸರ್ಕಾರ ಸರ್ವ ಪಕ್ಷದ ತೀರ್ಮಾನದಂತೆ ಕಾವೇರಿ ಜಲಾನಯನ ಪ್ರದೇಶದ ಜನ ಜಾನುವಾರುಗಳಿಗೆ ಅವಶ್ಯಕವಾಗಿರುವ ಕುಡಿಯುವ ನೀರಿಗೆ ಆದ್ಯತೆ ನೀಡಿ, ಹಾಲಿ ಬೆಳಗಳ ಸಂರಕ್ಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಗಿದೆ. ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕಾನೂನಾತ್ಮಕ ಹೋರಾಟಕ್ಕೆ ತಕ್ಷಣವೇ ಮುಂದಾಗಬೇಕು. ಭಾರತದ ರಾಷ್ಟ್ರೀಯ ಜಲ ನೀತಿಯ ಘೋಷಣೆಯಂತೆ ಕುಡಿಯುವ ನೀರನ್ನು ರಕ್ಷಣೆ ಮಾಡಲು ಕರ್ನಾಟಕ ಸರ್ಕಾರದ ಜೊತೆ ಕೇಂದ್ರ ಸರ್ಕಾರ ಬದ್ಧವಾಗಿರಬೇಕೆಂದು ಸಮಿತಿ ಆಗ್ರಹಿಸಿದೆ.
ಸೆ.23ರ ಮಂಡ್ಯ ಬಂದ್ ಹಿನ್ನೆಲೆಯಲ್ಲಿ 22ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಳವಳಿಯ ವೇದಿಕೆಯಲ್ಲಿ ಜಿಲ್ಲೆಯ ಎಲ್ಲಾ ಸಂಘಟನೆಗಳು, ಎಲ್ಲಾ ಹಾಲಿ, ಮಾಜಿ ಶಾಸಕರು ಹಾಗೂ ಸಂಸತ್ ಸದಸ್ಯರು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತ್ತು ಮಂಡ್ಯ ನಗರದ ವ್ಯಾಪಾರ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿ ಸಂಘಟನೆಗಳ ಹಾಗೂ ನಾಗರೀಕ ಬಂಧುಗಳ ಸಭೆ ಕರೆದಿದ್ದು ಎಲ್ಲರೂ ಭಾಗವಹಿಸುವಂತೆ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಮನವಿ ಮಾಡಿದ್ದಾರೆ.