ಪ್ರತಿಯೊಬ್ಬ ನಾಗರೀಕರೂ ಸ್ವಚ್ಛತೆಯ ಕಡೆಗೆ ಪ್ರಥಮ ಆದ್ಯತೆ ನೀಡಿದಾಗ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಹೇಳಿದರು.
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನದಡಿ “ಸ್ವಚ್ಛತಾ ಹಿ ಸೇವಾ” ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಒಂದು ಗಂಟೆಗಳ ಕಾಲ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಸ್ಪತ್ರೆ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛತಾ ಸೇವೆಯನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ. ಅದರಂತೆ ನಾನು, ನನ್ನ ಕುಟುಂಬ, ನನ್ನ ಗ್ರಾಮ ,ನನ್ನ ಕೆಲಸದ ಸ್ಥಳದೊಂದಿಗೆ ನಾನು ಸ್ವಚ್ಛತೆಯ ಕಡೆ ಗಮನಹರಿಸುತ್ತೇವೆಂಬ ಪ್ರತಿಜ್ಞಾ ವಿಧಿ ಬೋಧಿಸುವದರ ಮೂಲಕ ಕಾರ್ಯಕ್ರಮಕ್ಕೆ ಶುಭ ಕೋರಿದರು.
ನಂತರ ಆಸ್ಪತ್ರೆಯ ಆವರಣವನ್ನು ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಶ್ರಮದಾನ ಮೂಲಕ ಸ್ವಚ್ಚಗೊಳಿಸಿ ಸ್ವಚ್ಚತಾ ಆಂದೋಲನವನ್ನು ಯಶಸ್ವಿಗೊಳಿಸಲಾಯಿತು.
ಸದರಿ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್ ಕೆ ವೆಂಕಟೇಶ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಪಿ ಮಾರುತಿ, ಮಕ್ಕಳ ತಜ್ಞೆ ಡಾ. ಪಾರ್ವತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ , ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್,ಆರ್. ಬಿ. ಎಸ್. ಕೆ. ತಂಡದ ವೈದ್ಯರು ಹಾಗೂ ಸಿಬ್ಬಂದಿಗಳು ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.