ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ನಗರದಲ್ಲಿ ಅ.8ರಂದು ಕರುನಾಡ ವಿಜಯಸೇನೆ ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರುನಾಡ ವಿಜಯಸೇನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನೆ.ಲ.ರಾಮಪ್ರಸಾದ್ಗೌಡ ತಿಳಿಸಿದರು.
ಕಳೆದ ಹತ್ತು ವರ್ಷಗಳಿಂದಲೇ ಕಾವೇರಿ ಸೇರಿದಂತೆ ರಾಜ್ಯ ನೆಲ-ಜಲ, ಭಾಷೆ ವಿಚಾರವಾಗಿ ಕರುನಾಡ ವಿಜಯಸೇನೆಯು ಹೋರಾಟ ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶನಿವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಕರುನಾಡ ವಿಜಯಸೇನೆಯ ರಾಜ್ಯಾಧ್ಯಕ್ಷ ಎಚ್.ಎನ್.ದೀಪಕ್ ಅವರ ನೇತೃತ್ವದಲ್ಲಿ ಅಂದು ಮಧ್ಯಾಹ್ನ ೧೨ಕ್ಕೆ ನಗರದ ಮಹಾವೀರ ವೃತ್ತದಿಂದ ಸರ್ಎಂವಿ ಪ್ರತಿಮೆವರೆಗೆ ಮೆರವನಿಗೆ ನಡೆಸಿ, ಧರಣಿಯಲ್ಲಿ ಪಾಲ್ಗೊಳ್ಳಲಾಗುವುದು. ಕೇಂದ್ರ ಸರಕಾರವು ಸಂಕಷ್ಟ ಸೂತ್ರ ರಚಿಸಿ, ಕಾವೇರಿ ಸಮಸ್ಯೆಗೆ ಪರಿಹಾರ ಸೂಚಿಸಬೇಕು. ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿದೆ ಎಂದರು.
ಗೋಷ್ಠಿಯಲ್ಲಿ ಕರುನಾಡ ವಿಜಯಸೇನೆಯ ರಾಜ್ಯ ಕಾರ್ಯದರ್ಶಿ ಗಿರಿಜೇಶ್, ರಾಜ್ಯ ಯುವ ಘಟಕದ ಅಧ್ಯಕ್ಷ ಆರ್.ಎಸ್.ಮಹೇಶ್, ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾ ಘಟಕದ ಪದಾಧಿಕಾರಿಗಳಾದ ನವೀನ್, ವೆಂಕಟೇಶ್, ಮಹದೇವ ಹಾಜರಿದ್ದರು.