ಬೆಂಗಳೂರಿನ ಆನೇಕಲ್ ಸಮೀಪದ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಬಗ್ಗೆ ತನಿಖೆ ನಡೆಸಿ ತಪಿಸ್ಥತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದರು.
ಗೋದಾಮು ಮಾಲೀಕರು ಸ್ಫೊಟಕ ಕಾಯ್ದೆಯ ಎಸ್ಓಪಿಗಳನ್ನು ಪಾಲಿಸದೆ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಒಂದು ವರ್ಷಕ್ಕೆ ಪಟಾಕಿ ವ್ಯಾಪಾರಕ್ಕೆ ಇಲ್ಲಿ ಅನುಮತಿ ಪಡೆದಿದ್ದರು. ಆದರೆ ಗೋದಾಮಿಗೆ ಅನುಮತಿ ಪಡೆದಿರಲಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸಿಐಡಿ ತನಿಖೆ ನಡೆಸಿ ದುರಂತಕ್ಕೆ ಕಾರಣರಾದ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹೇಳಿದ್ದಾರೆ.
ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷರೂ. ಪರಿಹಾರನ್ನು ನಿನ್ನೆ ರಾಜ್ಯ ಸರಕಾರದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಘೋಷಿಸಿದ್ದರು. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ 20 ಕಾರ್ಮಿಕರು ಇದ್ದರು ಎನ್ನಲಾಗಿದೆ.