ಮಳವಳ್ಳಿ ತಾಲ್ಲೂಕು ಹಲಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಓ)ಗೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುವ ಸದಸ್ಯ ಸುರೇಂದ್ರನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾಲೂಕು ಕಚೇರಿಗೆ ತೆರಳಿ ತಹಸಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು
ಹಲಗೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ರುದ್ರಯ್ಯ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಬಳಿ ಸದಸ್ಯ ಸುರೇಂದ್ರ ನ್ಯಾಯ ಸಮ್ಮತವಲ್ಲದ ಬೇಡಿಕೆಗಳನ್ನು ಇಟ್ಟಿದ್ದರು. ಇದಕ್ಕೆ ಸ್ಪಂದಿಸದ ಪಿಡಿಓ ಅವರನ್ನು ಸೇವೆಯಿಂದ ಅಮಾನತು ಮಾಡಿಸುವುದಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದ್ದರಿಂದ ಈತನ ವಿರುದ್ದ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಅಧಿಕಾರಿಗಳಿಗೆ ಬೆದರಿಕೆ ಹಾಕುವ ಇಂತಹವರನ್ನು ಬಂಧಿಸಿ, ಪಂಚಾಯಿತಿಗಳಲ್ಲಿ ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಕಲ್ಪಿಸಿಕೊಡಬೇಕೆಂದು ಕೋರಿದರು.
ಸಂಘದ ಅಧ್ಯಕ್ಷ ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಿ.ಎಸ್, ಸುರೇಶ್. ಎಸ್.ಕೃಷ್ಣೆಗೌಡ ಮತ್ತಿತರರು ಭಾಗವಹಿಸಿದ್ದರು.